Sunday, October 30, 2011

'ನಮ್ಮ ಶಂಕರ'ನೆನಪಿಗೆ 'ನಮ್ಮ ಮೆಟ್ರೋ'!!

ವತ್ತು ಬೆಂಗಳೂರಿನ 'ಮೆಟ್ರೋ ರೈಲು' ಸಂಚಾರ ಉದ್ಘಾಟನೆಯ ದಿನ... ಜನ ಸಂಭ್ರಮದಿಂದ ಟಿಕೆಟ್ ಖರೀದಿಸಿ ಮೆಟ್ರೋ ಪ್ರಯಾಣದ ಸವಿ ಅನುಭವಿಸುವ ಖುಷಿಯಲ್ಲಿದ್ದರು..ನ್ಯೂಸ್ ಛಾನಲ್ ಒಂದು ಅದನ್ನ ಲೈವ್ ಆಗಿ ತೋರಿಸುತ್ತಿತ್ತು..  ಅಂತಹದ್ದೊಂದು ಗುಂಪಿನಲ್ಲಿ ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್ ಧರಿಸಿ ಸಂಭ್ರಮಿಸುತ್ತಿದ್ದ ಒಂದು ಹೆಣ್ಣು ಜೀವ ಕಾಣಿಸಿತು.. ಅದು ಸಂತೋಷವೋ, ಸಂತಸದ ದಿಗಿಲೋ ತಿಳಿಯುತ್ತಿರಲಿಲ್ಲ.. 'ಮೆಟ್ರೋ ನಮ್ಮ ಶಂಕರನ ಕನಸು ಅದು ಇವತ್ತು ನನಸಾಗಿದೆ ಅದಕ್ಕೆ ಟಿಕೆಟ್ ತಗೊಂಡಿದೀನಿ ನೋಡಿ, ಅವನ ನೆನಪಲ್ಲಿ ಪ್ರಯಾಣಿಸ್ತೀನಿ ಅಂತ ಹೇಳಿದ್ದು ಬೇರಾರು ಅಲ್ಲ, ಅವರೇ ಅರುಂಧತಿ ನಾಗ್!!ಒಂದೆಡೆ ಶಂಕರನ ಕನಸು ನನಸಾದ ಸಂಭ್ರಮ ಇನ್ನೊಂದೆಡೆ ಅದೇ ಸಮಯಕ್ಕೆ ಆತನಿಲ್ಲದ ದುಖ: ಅವರ ಮುಖಭಾವದಲ್ಲಿ ಬೇಡವೆಂದರೂ ಎದ್ದು ಕಾಣಿಸುತ್ತಿತ್ತು.  ಒಂದು ಕ್ಷಣ ನನಗೆ ತಿಳಿಯದಂತೆ ಕಣ್ಣಂಚು ಒದ್ದೆಯಾಯಿತು. ಹೌದು 'ನಮ್ಮ ಶಂಕರ'ನ ತಾಕತ್ತೇ ಅಂತಹುದು. 25ವರ್ಷಗಳ ಹಿಂದೆಯೇ ಇಂತಹದ್ದೊಂದು ಕನಸಿನ ಪ್ರಾಜೆಕ್ಟ್ ಸಿದ್ದಪಡಿಸಿ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ಸಂಧರ್ಭದಲ್ಲಿ ಪ್ರಸ್ತಾಪ ಮಾಡಿದ್ದು ನಮ್ಮ ವರ್ಕಾಲಿಕ್ ನಟ-ನಿರ್ದೇಶಕ-ನಾಟಕಕಾರ ಮಾನವೀಯ ಸೆಲೆಯ ಶಂಕರ್ ನಾಗ್.
         ಶಂಕರ್ ನಾಗ್ ನಮ್ಮನಗಲಿ ಸೆ.30ಕ್ಕೆ ಸರಿಯಾಗಿ 21ವರ್ಷಗಳು, ಆತ ಕೇವಲ ನಟನಾಗಿ, ನಿರ್ದೇಶಕನಾಗಿ ಉಳಿಯದೇ ಸಮಾಜ ಮುಖಿಯಾಗಿ ಚಿಂತಿಸುವ ಒಬ್ಬ ಶ್ರೇಷ್ಠ ವ್ಯಕ್ತಿಯಾಗಿ ಅಜರಾಮರ ಎನಿಸಿದ್ದಾರೆ. ಶಂಕರ್ ನಾಗರಕಟ್ಟೆ ಉತ್ತರ ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಹಳ್ಳಿಯಲ್ಲಿ ಜನಿಸಿದ್ದು 9ನೇ ನವೆಂಬರ್ 1954ರಂದು. ಸಹಜಾಭಿನಯಕ್ಕೆ ಖ್ಯಾತಿ ಪಡೆದಿರುವ ಮೇರು ನಟ ಅನಂತ್ ನಾಗ್ ರ ಸಹೋದರಾಗಿದ್ದ ಶಂಕರ್ ನಾಗ್ ವಿದ್ಯಾಭ್ಯಾಸ ಮುಗಿದ ನಂತರ ಪ್ರಯಾಣ ಬೆಳೆಸಿದ್ದು ಮುಂಬೈಗೆ. ಅಲ್ಲಿ ಮರಾಠಿ ಹಾಗೂ ಕೊಂಕಣಿ ನಾಟಕಗಳಲ್ಲಿ ಭಾಗವಹಿಸುತ್ತಿದ್ದ ಶಂಕರ ಜೀವನೋಪಾಯಕ್ಕೆ ಬ್ಯಾಂಕ್ ನೌಕರಿಗೂ ಸೇರಿದ್ದರೂ. ಆದರೆ ರಂಗಭೂಮಿಯ ಸೆಳೆತ ಅವರನ್ನು ಕಲಾ ಲೋಕಕ್ಕೆ ಸೆಳೆದು ಬಿಟ್ಟಿತು. ಹೀಗಿರುವಾಗ ಅದೊಂದು ದಿನ ಗಿರಿಶ್ ಕಾರ್ನಾಡರು ದೆಹಲಿಯಲ್ಲಿ ನಡೆದ ಅಂತರ ರಾಷ್ಟ್ರಿಯ ಚಲನಚಿತ್ರೋತ್ಸವದಲ್ಲಿ ಶ್ರೆಷ್ಠ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿ ಪ್ರಶಸ್ತಿ ಪಡೆದ ಅಕಿರಾ ಕುರುಸೋವ ಅವರ ಜಪಾನಿ ಭಾಷೆಯ "ಸೆವೆನ್ ಸಮುರಾಯ್ಸ್" ಚಿತ್ರವನ್ನು ಕನ್ನಡದಲ್ಲಿ ತೆರೆಗೆ ತರಲು ಸಿದ್ದತೆ ನಡೆಸಿದ್ದರು. ಆ ಚಿತ್ರದ ಪ್ರಧಾನ ಪಾತ್ರಕ್ಕೆ ಸೂಕ್ತ ನಾಯಕನನ್ನು ಹುಡುಕುತ್ತಿದ್ದಾಗ ಮರಾಠಿ ರಂಗಭೂಮಿಯಲ್ಲಿ ಗಮನ ಸೆಳೆದಿದ್ದ ಶಂಕರ ಕಣ್ಣಿಗೆ ಬಿದ್ದಿದ್ದ. ಕಾರ್ನಾಡರು ಆಹ್ವಾನ ನೀಡಿದಾಗ ಮೊದಲಿಗೆ ನಿರಾಕರಿಸಿದ್ದ ಶಂಕರ್ ನಂತರ ಸಹೋದರನ ಒತ್ತಾಸೆಯ ಮೇರೆಗೆ 'ಒಂದಾನೊಂದು ಕಾಲದಲ್ಲಿ " ಚಿತ್ರವನ್ನು ಒಪ್ಪಿಕೊಂಡರು. ದೇಸೀ ನೆಲಕ್ಕೆ ಒಗ್ಗಿಸಿದ್ದ ಕಥೆಗೆ ಕೇವಲ ನಟನಾಗದೇ ತಾನೇ ಪಾತ್ರವಾಗಿ ಹೋದ ಶಂಕರ ಸಿನಿಮಾ ರಂಗದಲ್ಲಿ ತನ್ನ ಛಾಪನ್ನು ಮೂಡಿಸಿ ಬಿಟ್ಟಿದ್ದ, ಅಷ್ಟೇ ಅಲ್ಲ ಆ ಚಿತ್ರದ ನಟನೆಗಾಗಿ ಆತನಿಗೆ ರಾಷ್ಟ್ರಪತಿಗಳ ಗೋಲ್ಡನ್ ಪೀಕಾಕ್ ಅವಾರ್ಡ್ ನ ಗರಿಯನ್ನು ಮುಡಿಗೇರಿಸಿಕೊಂಡಿದ್ದ. ನೆನಪಿರಲಿ ಕನ್ನಡದಲ್ಲಿ ಅಂತಹ ಪುರಸ್ಕಾರ ಪಡೆದ ಏಕೈಕ ನಟ ಶಂಕರ್ ನಾಗ್. 1978ರಿಂದ ಆರಂಭವಾದ ಶಂಕರನ ಸಿನಿಮಾಯಾನ 1990ರ ವರೆಗೆ ಸತತವಾಗಿ 12ವರ್ಷ ಮುಂದುವರೆದಿತ್ತು. 90ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಶಂಕರ ಒಂದು ಹಿಂದಿ ಸಿನಿಮಾದಲ್ಲೂ ನಟಿಸಿದ್ದಾರೆ. ನಟನಾಗಿ ಜನರನ್ನ ಆಕರ್ಷಿಸಿದ್ದಕ್ಕಿಂತ ನಿರ್ದೇಶಕನಾಗಿ ಹೆಚ್ಚು ಗಮನ ಸೆಳೆದ ಶಂಕರ್ ನಾಗ್ 70 ರ ದಶಕದಲ್ಲೇ ಅಡ್ವಾನ್ಸ್ ಆದ ಆಫ್ ಬೀಟ್ ಸಿನಿಮಾಗಳನ್ನು ನಿರ್ದೆಶಿಸಿದ್ದನಲ್ಲದೇ ಅದಕ್ಕಾಗಿ ಅಂತರ ರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದರು. ಏಕ ಕಾಲದಲ್ಲಿ ರಂಗಭೂಮಿಗೂ ಗಮನ ನೀಡಿದ ಶಂಕರ್ ವಿದೇಶಿ ನೆಲದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದರು. ಬಹುಶ: ರಂಗಭೂಮಿಯ ಮೂಲಕ ಶಂಕರ್ ವಿದೇಶಗಳಲ್ಲಿ ನೀಡಿದಷ್ಟು ಪ್ರದರ್ಶನಗಳನ್ನ ಮತ್ಯಾವ ಕಲಾವಿದನೂ ನೀಡಿರಲಾರ. ತನ್ನದೇ ನಿರ್ದೇಶನದ 'ಮಿಂಚಿನ ಓಟ' 'ಆಕ್ಸಿಡೆಂಟ್', 'ಗೀತಾ', 'ನೋಡೀಸ್ವಾಮಿ ನಾವಿರೋದೇ ಹೀಗೆ'  ಯಂತಹ ಹಲವು ವಿಭಿನ್ನ ಧಾಟಿಯ ಸಿನಿಮಾಗಳನ್ನು ನೀಡಿದ ಶಂಕರ್ ನಾಗ್ ತಾಂತ್ರಿಕವಾಗಿ ಅಂದಿನ ದಿನಗಳಲ್ಲಿ ಸವಾಲಾಗಿದ್ದ ಛಾಯಾಗ್ರಹಣದ ಸಾಧ್ಯತೆಗಳನ್ನು ಭಾರತೀಯ ಚಿತ್ರರಂಗದಲ್ಲಿ ಮೊದಲಭಾರಿಗೆ ಬಳಕೆಗೆ ತಂದದ್ದು ಇದೇ ಶಂಕರ್ ನಾಗ್.. 7ರಾಷ್ಟ್ರಗಳಿಗೆ ಭೇಟಿ ನೀಡಿ ತಂತ್ರಜ್ಣಾನದ ಸಾಧ್ಯತೆಗಳನ್ನು ಒಗ್ಗಿಸಿಕೊಂಡು ನಿರ್ದೇಶಿಸಿದ ಆ ಚಿತ್ರ ಡಾ|| ರಾಜ್ ನಟಿಸಿದ್ದ 'ಒಂದು ಮುತ್ತಿನ ಕಥೆ'. 
        ಶಂಕರ್ ಯೋಚಿಸುವ ಪರಿಯನ್ನ ಆತ ನಿರ್ದೇಶಿಸಿ ಚಿತ್ರಗಳನ್ನು ನೋಡಿದರೆ ತಿಳಿಯಬಹುದು, ಸಾಮಾಜಿಕ ಪರಿಣಾಮ ಬೀರುವ ಮತ್ತು ವಾಸ್ತವ ಜಗತ್ತಿನ ಅರಿವು ಮೂಡಿಸುವ ಮೂಲಕ ಚಿಂತನೆಗೆ ಹಚ್ಚುವ ಚಿತ್ರಗಳನ್ನು ನಿರ್ದೇಶಿಸಿದ ಶಂಕರ್, ಅಂತರ ರಾಷ್ಟ್ರೀಯ ಮಟ್ಟದಲ್ಲಿ ಧೃಢವಾಗಿ ತಮ್ಮನ್ನು ಪರಿಚಯಿಸಿ ಕೊಂಡದ್ದು 'ಮಾಲ್ಗುಡಿ ಡೇಸ್' ಎಂಬ ಕಿರುತೆರೆ ಸೀರಿಯಲ್ ಮೂಲಕ. ತಾನು ಬೆಳೆಯುವ ಜೊತೆಗೆ ಸಾವಿರಾರು ಕಲಾವಿದರು, ತಂತ್ರಜ್ಞರನ್ನು ಬೆನ್ನು ತಟ್ಟಿ ಉತ್ಸಾಹ ತುಂಬಿ ಬೆಳೆಸಿದ ಶಂಕರ್... ಮಾನವೀಯ ಸೆಲೆಯಿಂದಾಗಿ ಸಾಮಾನ್ಯ ಜನರ ಬದುಕಿನಲ್ಲೂ ಅಮರವಾಗಿ ಉಳಿದಿದ್ದಾರೆ. 'ಆಟೋ ರಾಜ' ಚಿತ್ರದ ನಂತರ ಖಾಯಂ ಆಗಿ ಆಟೋದವರ ಆರಾಧ್ಯ ಧೈವವಾಗಿ ಬೆಳೆದು ನಿಂತ ಶಂಕರ್ ನ ಎತ್ತರವನ್ನು ಎಷ್ಟೋ ಮಂದಿ ನಟರು ಬಂದು ಹೋದರು ಏರಲಾಗಿಲ್ಲವೆಂದರೆ ಅವನ ತಾಕತ್ತನ್ನು ಊಹಿಸಬಹುದು. ಇವತ್ತಿಗೂ ಕನ್ನಡ ಚಿತ್ರರಂಗದಲ್ಲಿ ಹಾಗೂ ಹಿಂದಿ ಸಿನಿಮಾ ರಂಗದಲ್ಲಿ ಶಂಕರ್ ನಿಂದ ಪ್ರೇರಿತರಾಗಿ ಯಶಸ್ಸು ಕಂಡಿರುವ ಹಲವಾರು ಮಂದಿ ಯನ್ನು ವಿವಿಧ ವಿಭಾಗಗಳಲ್ಲಿ ಕಾಣಬಹುದು. 
       ಸ್ವಾಭಿಮಾನದ ಸಂಕೇತದಂತಿದ್ದ ಶಂಕರ್ ನಾಗ್ ಕನ್ನಡ ಚಿತ್ರಗಳ ಧ್ವನಿ ಗ್ರಹಣ ಹಾಗೂ ಸಂಕಲನಕ್ಕಾಗಿ ತಮಿಳುನಾಡಿಗೆ ಹೋಗಬೇಕಾದಂತಹ ದಿನಗಳಲ್ಲಿ ಬೆಂಗಳೂರಿನಲ್ಲಿ ಸಂಕೇತ್ ಸ್ಟುಡಿಯೋ ಸ್ಥಾಪಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಆಸರೆಯಾದವರು ಶಂಕರ್ ನಾಗ್. ಅವತ್ತಿನ ದಿನಗಳಲ್ಲೇ ನಂದಿ ಬೆಟ್ಟಕ್ಕೆ ರೋಪ್ ವೇ, ನಗರದಲ್ಲಿ ಮೆಟ್ರೋ ರೈಲು ಯೋಜನೆ, ಬಡವರಿಗೆ ಕಡಿಮೆ ಬೆಲೆಯಲ್ಲಿ ನಿರ್ಮಿಸಿಬಹುದಾದಂತಹ ಮನೆಗಳನ್ನು ಹಾಲೆಂಡ್ ದೇಶದ ಮಾದರಿಯಲ್ಲಿ ನಿರ್ಮಿಸುವ ಪ್ರಸ್ತಾವ ಮುಂದಿರಿಸಿದ್ದು ಹಾಗು ದೇಶದಲ್ಲಿ ರೆಸಾರ್ಟ್ ಮಾದರಿ ಕಂಟ್ರಿ ಕ್ಲಬ್ ಸ್ತಾಪಿಸಿ ಅಲ್ಲಿ ನಿರಂತರ ರಂಗಭೂಮಿಗೆ ಉತ್ತೇಜನ ನೀಡುವ ಮಹತ್ವದ ಸಂಕಲ್ಪ ಮಾಡಿ ಶ್ರಮಿಸಿದ್ದು ಇದೇ ಶಂಕರ್ ನಾಗ್. 
        ಚಿತ್ರರಂಗದಲ್ಲಿರುವ ತೆರೆಯ ಹಿಂದಿನ ಮತ್ತು ಮೇಲಿನ ಸಾವಿರಾರು ಮಂದಿ ಇವತ್ತಿಗೂ ಶಂಕರ್ ನಾಗ್ ರನ್ನು ನೆನಪಿಸಿಕೊಂಡು ಕಣ್ಣೀರಾಗುತ್ತಾರೆಂದರೆ ಅದಕ್ಕೆ ಶಂಕರ್ ನಾಗ್ ರ ಆಲೋಚನ ಪರಿ ಹಾಗೂ ಆತನ ಕನಸುಗಳ ಮೂಟೆ, ಪ್ರೀತಿ ವಾತ್ಸಲ್ಯ, ಪ್ರೋತ್ಸಾಹ ಕಾರಣ. ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ಮಾತಿನಂತೆ ತಾನು ಕಂಡ ಕನಸುಗಳ ಸಾಕಾರಕ್ಕೆ ಇನ್ನಿಲ್ಲದ ಶ್ರಮ ಹಾಕುತ್ತಿದ್ದ ಶಂಕರ್ ನಾಗ್ ನಿದ್ರಿಸುತ್ತಿದುದು ತುಂಬಾ ಕಡಿಮೆ. ಅಂದರೆ ಸತ್ತ ಮೇಲೆ ದೀರ್ಘ ನಿದ್ದೆಗೆ ಅವಕಾಶವಿದೆ ಹಾಗಿರುವಾಗ ಬದುಕಿರುವಾಗ ದೀರ್ಘ ನಿದ್ರೆ ಮಾಡಿ ಸಮಯ ಹಾಳು ಮಾಡಬಾರದು ಎಂಬ ನಿಟ್ಟಿನಲ್ಲಿ ಶ್ರಮವನ್ನು ಧಾರೆಯೆರೆಯುತ್ತಿದ್ದ  ಶಂಕರ್ ನಾಗ್ ಯಾವತ್ತಿಗೂ ಜನಮಾನಸದಲ್ಲಿ ಅಜರಾಮರರೇ ಆಗಿದ್ದಾರೆ. ಒಂದು ಉತ್ತಮ ಅಭಿರುಚಿಯನ್ನ, ಅನುಭಾವವನ್ನ ನಮಗೆ ಉಳಿಸಿಹೋಗಿರುವ ಶಂಕರ್ ನಾಗ್ ಸದಾಕಾಲ ನೆನಪಿಗೆ ಅರ್ಹರೇ ಆಗಿದ್ದಾರೆ, ದೈಹಿಕಾವಾಗಿ ಇಲ್ಲದಿದ್ದರೂ ತಮ್ಮ ಕೆಲಸದ ಮೂಲಕ ನಮ್ಮೊಂದಿಗೆ ಇರುವ ಶಂಕರ್ ಹೆಸರನ್ನು 'ನಮ್ಮ ಮೆಟ್ರೋ'ಗೆ ಇಟ್ಟರೆ ಅದು ಸಾರ್ಥಕವಾದೀತು. ಸರ್ಕಾರ ದಿಸೆಯಲ್ಲಿ ಕ್ರಮ ವಹಿಸಬೇಕು, ಸಮಸ್ತ ಅಭಿಮಾನಿಗಳು ಮತ್ತು ಚಿತ್ರರಂಗದ ಒತ್ತಾಸೆ ಈ ನಿಟ್ಟಿನಲ್ಲಿ ಹೊರಹೊಮ್ಮಿದರೆ ಇದು ಸಾಧ್ಯವಾದೀತೇನೋ?

Sunday, October 16, 2011

'ಜ್ಞಾನ'ಪೀಠಕ್ಕೆ ಅಸಹನೆ ಯಾಕೆ?


ಮೊನ್ನೆ ಜಾನಪದ ವಿದ್ವಾಂಸ,ನಾಟಕಕಾರ, ಸಾಹಿತಿ,ನಿರ್ದೇಶಕ ಚಂದ್ರಶೇಖರ ಕಂಬಾರರಿಗೆ 8ನೇ ಜ್ಞಾನಪೀಠ ಪ್ರಶಸ್ತಿ ಪ್ರಕಟವಾದ ಸಂಧರ್ಭ..'ಯೋಗ್ಯತೆ ಇಲ್ಲದವರಿಗೆ ಜ್ಞಾನಪೀಠ ಪ್ರಶಸ್ತಿ ಬರುತ್ತಿದೆ, ಯೋಗ್ಯರು ಭಾಳಾ ಮಂದಿ ಅದಾರೆ ' ಎಂದು ಪ್ರತಿಕ್ರಿಯಿಸಿದ್ದು  ಪಾಟೀಲ ಪುಟ್ಟಪ್ಪ. "ಪ್ರಶಸ್ತಿ ಬಂದಾಗ ಪರ ವಿರೋಧ ಹೇಳಿಕೆ ನೀಡೋದು ಇರ್ತಾವಾ, ಅದು ಅವರವರ ಅಭಿಪ್ರಾಯ. ನಾನು ಅವರ ಹೇಳಿಕೆಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲಾರೆ" ಎಂದು  ಡಾ. ಚಂದ್ರಶೇಖರ ಕಂಬಾರರು ಪ್ರತಿಕ್ರಿಯಿಸಿದ್ದರು. ನಂತರ ಪಾಟೀಲ ಪುಟ್ಟಪ್ಪನವರ ಧಾಟಿಯಲ್ಲೇ ಬೈರಪ್ಪನವರನ್ನು ಬೆಂಬಲಿಸುವ ಅದರಲ್ಲೂ ಜಾತಿಯ ಹಿನ್ನೆಲೆಯಲ್ಲಿ ಕಂಬಾರರ ಶ್ರೇಷ್ಠತೆಯನ್ನು ಪ್ರಶ್ನಿಸಲು ನಿಂತದ್ದು ಒಂದು ಸಮೂಹ! ಇದನ್ನು ವಿರೋಧಿಸುವ ಭರದಲ್ಲಿ ಎಸ್ ಎಲ್ ಬೈರಪ್ಪನವರನ್ನು ಸಾರ್ವತ್ರಿಕವಾಗಿ ತೆಗಳಿದ್ದಲ್ಲದೇ ಅವರಿಗೆ ಜ್ಞಾನಪೀಠ ಸಿಗುವುದೇ ಆದರೆ ಮರಣೋತ್ತರವಾಗಿ ಸಿಗಲಿ  ಎಂದು ನಿಡುಮಾಮಿಡಿ ಸ್ವಾಮೀಜಿ ಹಾಗೂ ಅಗ್ನಿ ಶ್ರೀಧರ್ ಇತರರು ಜರಿದದ್ದು ಕನ್ನಡ ಸಾರಸ್ವತ ಲೋಕದಲ್ಲಿ ಒಳ್ಳೆಯ ಬೆಳವಣಿಗೆಯೇನಲ್ಲ. 
        8ನೇ ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ಭಾರತೀಯ ಭಾಷೆಗಳ ಸಾಹಿತ್ಯ ವಲಯದಲ್ಲಿ ಉನ್ನತ ಸ್ಥಾನಕ್ಕೇರಿರುವ ಕನ್ನಡ ಭಾಷೆಯ ಶ್ರೇಷ್ಠತೆಗೆ ಸಮಸ್ತ ಕನ್ನಡಿಗರೂ ಸಂಭ್ರಮ ಪಡುವ ಕಾಲವಿದು. ಆದರೆ ಇದೇನಿದು? ಅತ್ಯುನ್ನತ ಪುರಸ್ಕಾರ ಲಭಿಸಿದಾಗ ಅದನ್ನು ಜಾತಿಯ ಹಿನ್ನೆಲೆಯಲ್ಲಿ, "ಲಾಬಿ" ಮಾಡಿ ಪಡೆದಿದ್ದಾರೆಂಬ ಅರ್ಥವಿಲ್ಲದ ವ್ಯಾಖ್ಯಾನ ಮಾಡುತ್ತಾ ಒಬ್ಬರ ಮೇಲೊಬ್ಬರು ಕೆಸರೆರಚಾಡುತ್ತಾ ಹಂಗಿಸುವ ಪರಂಪರೆ? ನಾಚಿಕೆಯಾಗ ಬೇಕು ಸದರಿ ಬುದ್ದಿಜೀವಿಗಳಿಗೆ ಮತ್ತು ತಲೆ ಬುಡ ತಿಳಿಯದೇ ಯಾವುದಾದರೊಂದು ಕಾರಣಕ್ಕೆ ಎರಡೂ ಪಕ್ಷಗಳನ್ನು ಬೆಂಬಲಿಸುವ ಮೂರ್ಖರಿಗೆ! ಕನ್ನಡ ಸಾಹಿತ್ಯ ಪರಂಪರೆ ಅತ್ಯಂತ ಶ್ರೀಮಂತವಾದದ್ದು ಇಲ್ಲಿ ಇನ್ನೂ ಹಲವಾರು ಮಂದಿ ಜ್ಞಾನಪೀಠಿಗಳಿದ್ದಾರೆ, ಪ್ರಶಸ್ತಿ ಬಾರದ ಮಾತ್ರಕ್ಕೆ ಅವರೆಲ್ಲ ತೃಣಕ್ಕೆ ಸಮಾನರೆಂದು ಯಾಕಾದರೂ ಭಾವಿಸಬೇಕು. ಕೆಲವು ಪ್ರಶಸ್ತಿಗಳಿಂದ ಯಾರೂ ದೊಡ್ಡವರಾಗುವುದಿಲ್ಲ, ಆದರೆ ಕೆಲವೊಮ್ಮೆ ಪುರಸ್ಕೃತರಾಗುವವರಿಂದ ಪ್ರಶಸ್ತಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಕ್ಕುಬಿಡುತ್ತದೆ. ಈಗ ಜ್ಞಾನ ಪೀಠ ಪಡೆದ 8ಮಂದಿ ಜ್ಞಾನಪೀಠಿಗಳು ಅದ್ವಿತೀಯರೇ ಆಗಿದ್ದಾರೆ. ಆದರೆ ವ್ಯವಸ್ಥೆಯಲ್ಲಿ ದಿಕ್ಕುತಪ್ಪಿದ ಆಲೋಚನೆಗಳು ವಿನಾಕಾರಣ ಅಪಪ್ರಚಾರಕ್ಕೆ ಮುಂದಾಗಿ ಬಿಡುತ್ತವೆ ಇದು ಸಾರಸ್ವತ ಲೋಕಕ್ಕೆ ಅಪಾಯಕಾರಿ. 
       ಜ್ಞಾನಪೀಠ ಪ್ರಶಸ್ತಿ ಕುರಿತು ಚೂರು ಮಾಹಿತಿ ಹೇಳಿ ನಂತರ ಚರ್ಚೆಗೆ ಬರೋಣ, ಜ್ಞಾನಪೀಠ ಪ್ರಶಸ್ತಿ ಯಾವುದೇ ಸರ್ಕಾರ ಕೊಡುವ ಪ್ರಶಸ್ತಿಯಲ್ಲ! ಜ್ಞಾನಪೀಠ ಟ್ರಸ್ಟ್ ಇದನ್ನು ಕೊಡಮಾಡುತ್ತದೆ. ಜ್ಞಾನಪೀಠ ಟ್ರಸ್ಟ್ ನ ನಿರ್ವಹಣೆ ಜೈನ ಕುಟುಂಬ ಮಾಡುತ್ತದೆ, ಜ್ಞಾಪೀಠ ಟ್ರಸ್ಟ್ ನ ಒಡೆತನ ಟೈಂಸ್ ಆಫ್ ಇಂಡಿಯಾ ಗ್ರೂಪ್ ಗೆ ಸೇರಿದೆ. ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ದೇಶದ ಅತ್ಯುತ್ತನ್ನತ ಪ್ರಶಸ್ತಿಯಾಗಿದೆ. ಈ ಪ್ರಶಸ್ತಿಯನ್ನು ಮೇ ೨೨ ೧೯೬೧ ರಲ್ಲಿ ಸ್ಥಾಪಿಸಲಾಯಿತು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ಐದು ಲಕ್ಷ ರುಪಾಯಿ ನಗದು ಹಾಗು ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು.
         ಅಂದ ಹಾಗೆ ಕನ್ನಡಕ್ಕೆ ಮೊದಲ ಜ್ಞಾನ ಪೀಠ ಪ್ರಶಸ್ತಿಯನ್ನು ತಂದು ಕೊಟ್ಟದ್ದು ಕುವೆಂಪು 1967ರಲ್ಲಿ. ಆ ದಿನಗಳಲ್ಲಿ ಇನ್ನೂ ಭಾರತೀಯ ಸಮಗ್ರ ಸಾಹಿತ್ಯಕ್ಕೆ ಕೊಡುಗೆ ನೀಡಿದವರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಕೊಡಲು ಆರಂಭಿಸಿರಲಿಲ್ಲ. ಆ ದಿನಗಳಲ್ಲಿ ತಮ್ಮ ಸಾಹಿತ್ಯ ಕೃತಿ ಶ್ರೀ ರಾಮಾಯಣ ದರ್ಶನಂ ಗೆ ಜ್ಞಾನಪೀಠ ಪ್ರಶಸ್ತಿಯನ್ನು ಕುವೆಂಪು ಪಡೆದಾಗ ಬೆಚ್ಚಿ ಬಿದ್ದದ್ದು ಪುರೋಹಿತ ಶಾಹಿ ವರ್ಗ.. ಒಬ್ಬ ಶೂದ್ರ ಜ್ಞಾನಪೀಠಕ್ಕೆ ಅರ್ಹವಾಗುವ ರಾಮಾಯಣ ದರ್ಶನಂ ಬರೆದನೋ ಎನ್ನುವ ಕಿಡಿಗೇಡಿ ಮಾತನ್ನು ಆಡಿ ಬಿಟ್ಟಿತ್ತು. ಅಂದು ಕುವೆಂಪು ತುಂಬ ನೊಂದು ಬಿಟ್ಟಿದ್ದರು. ಜ್ಞಾನಪೀಠ ಪ್ರಶಸ್ತಿ ಆರಂಭವಾದ ಕೆಲವೇ ವರ್ಷಗಳಲ್ಲಿ ಮೊಟ್ಟ ಮೊದಲ ಭಾರಿಗೆ  4ನೇ ಜ್ಞಾನಪೀಠ ಪ್ರಶಸ್ತಿಯನ್ನು ಕನ್ನಡಕ್ಕೆ ತಂದು ಕೊಟ್ಟ ಹೆಮ್ಮೆ ಕುವೆಂಪು ರವರದ್ದಾಗಿತ್ತು. ಆದರೆ ಜಾತೀಯ ಅಸಹನೇ ಮತ್ತು ಕೀಳು ಮನೋಭಾವ,  ಸಂಕುಚಿತ ಮನೋಭಾವ ಜ್ಞಾನಪೀಠದ ಸಂಭ್ರಮವನ್ನು ಅಂದು ಹೊಸಕಿ ಹಾಕಿತ್ತು. ಇವತ್ತು ಅದೇ ಮನಸ್ಸುಗಳು ಕಂಬಾರರನ್ನು ಜಾತಿಯ ಹಿನ್ನೆಲೆಯಲ್ಲಿ ಅಣಕಿಸಲು ಪ್ರಯತ್ನಿಸುತ್ತಿರುವುದು ವ್ಯವಸ್ಥೆಯ ದುರಂತವೇ ಸರಿ! 
       ಚಂದ್ರ ಶೇಖರ ಕಂಬಾರರಿಗೂ ಇದು ಹೊಸತೇನಲ್ಲ.  ಕಂಬಾರರು ಯುವಕರಾಗಿದ್ದಾಗ ದಾರವಾಡದ ಕವಿ ಸಮ್ಮೇಳನದಲ್ಲಿ ಕವಿತೆಯೊಂದನ್ನು ಓದಿದ್ದರಂತೆ,ಖ್ಯಾತ ಕವಿಗಳೊಬ್ಬರು ಅಧ್ಯಕ್ಷತೆ ವಹಿಸಿದ್ದರು,ಕಂಬಾರರ ಕವಿತೆ ಅಲ್ಲಿ ಓದಿದ ಎಲ್ಲ ಕವಿಗಳಿಗಿಂತ ಭಿನ್ನವಾಗಿದ್ದದ್ದು ಎಲ್ಲರ ಗಮನಕ್ಕೆ ಬಂದಿದ್ದರೂ,ಅದ್ಯಕ್ಷರು ಕಂಬಾರರ ಬಗ್ಗೆ ಕುಹಕದ ಮಾತು ಹೇಳಿದ್ದರು,"ಕಬ್ಬಿಣ ಕಾಸುವವರೂ ಈಗ ಕಾವ್ಯ ಬರೆಯುತ್ತಿದ್ದಾರೆ " ಎಂಬ ಅಧ್ಯಕ್ಷರ ಮಾತು ಕಂಬಾರರ ಸ್ವಾಭಿಮಾನವನ್ನೇ ಬಡಿದೆಬ್ಬಿಸಿತು,ಅಂದೇ ಕಂಬಾರ ಕಾವ್ಯವನ್ನು ಪಳಗಿಸಿಕೊಳ್ಳಲು ನಿರ್ಧರಿಸಿದರಂತೆ.ಅವರ ಅಚಲ ನಿರ್ಧಾರ ಹಾಗೂ ಪ್ರಯತ್ನಗಳು ಇವತ್ತು ಅವರ ಸಾಧನೆಯನ್ನು ಜ್ಞಾನಪೀಠದ ಅಂಚಿಗೆ ತಂದು ನಿಲ್ಲಿಸಿದೆ. ಚಂದ್ರ ಶೇಖರ ಕಂಬಾರ ಕನ್ನಡದ ವರಕವಿ ದ.ರಾ ಬೇಂದ್ರೆಯವರ ನಂತರ ಕನ್ನಡ ಭಾಷೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ದುಡಿಸಿಕೊಂಡು ಸಾಹಿತ್ಯ ರಚಿಸಿದ ಕೀರ್ತಿ ಕಂಬಾರರಿಗೆ ಸಲ್ಲುತ್ತದೆ. ಮೊಟ್ಟ ಮೊದಲ ಭಾರಿಗೆ ಕನ್ನಡದಲ್ಲಿ ಜಾನಪದ ವಿಶ್ವಕೋಶವನ್ನು ರಚಿಸಿದ ಕಂಬಾರ ಆ ಮೂಲಕ ಜಾನಪದ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷವಾದ ಸ್ಥಾನವನ್ನು ಕಲ್ಪಿಸಿದ್ದಾರೆ. ಜಾನಪದದ ಜೊತೆಗೆ ವೈಚಾರಿಕತೆಯನ್ನು ಬೆಸೆಯುವ ಕಂಬಾರರ ಧಾಟಿ ಅವರಿಗೆ ಸರಿಸಾಟಿಯಾಗುವಂತಿದೆ. ಕಂಬಾರರು ಒಟ್ಟು ೨೨ ನಾಟಕಗಳು, ೮ ಕವನ ಸಂಕಲನಗಳು ಮತ್ತು ೪ ಕಾದಂಬರಿಗಳನ್ನು ರಚಿಸಿದ್ದಾರೆ. ಅಲ್ಲದೆ ಚಕೋರಿ ಎಂಬ ಮಹಾಕಾವ್ಯ, ಜಾನಪದ, ರಂಗಭೂಮಿ, ಸಾಹಿತ್ಯ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ೧೪ ಸಂಶೋಧನಾ ಕೃತಿಗಳನ್ನೂ ರಚಿಸಿದ್ದಾರೆ.ಏಲ್ಲಾ ಸೇರಿ ಸುಮಾರು ನಲವತ್ತಕ್ಕೂ ಮಿಕ್ಕಿ ಕೃತಿಗಳು ಹೊರಬಂದಿವೆ.ಇವರ ಅನೇಕ ಕೃತಿಗಳು ಹಿಂದಿ, ಇಂಗ್ಲೀಷ್ ಸಹಿತ ಹಲವು ಭಾಷೆಗಳಿಗೆ ಅನುವಾದಗೊಂಡಿವೆ.‘ಬೆಂಬತ್ತಿದ ಕಣ್ಣು’(೧೯೬೧) ಮತ್ತು ‘ನಾರ್ಸಿಸಸ್‌’(೧೯೬೯) ಹೆಸರು ಮಾಡಿದ ಇವರ ನಾಟಕಗಳು.ಪದ್ಮಶ್ರೀ, ನಾಡೋಜ, ಕಬೀರ್ ಸಮ್ಮಾನ್ ಹೀಗೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಕಂಬಾರರು ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅನನ್ಯವಾದದ್ದು. ಅದೇ ರೀತಿ ಸಂತೆ ಶಿವರ ಲಿಂಗಣ್ಣಯ್ಯ ಬೈರಪ್ಪ ಸಾಹಿತ್ಯ ಲೋಕದಲ್ಲಿ ವಿಶಿಷ್ಠ ರೀತಿಯಲ್ಲಿ ತಮ್ಮ ಅಸ್ತ್ವಿತ್ವ ದಾಖಲಿಸಿದವರು. ಆಧುನಿಕ ದಿನಗಳಲ್ಲಿ ಇವತ್ತಿಗೂ ಹೆಚ್ಚು ಓದಿಸಿಕೊಳ್ಳುವ ನಂ.1 ಸ್ಥಾನ ಅತಿಕ್ರಮಿಸಿದ ಹೆಗ್ಗಳಿಕೆ ಬೈರಪ್ಪನವರಿಗಿದೆ. 2010ರ ಸರಸ್ವತಿ ಸಮ್ಮಾನ್,ಪಂಪ ಪುರಸ್ಕಾರ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹೀಗೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿರುವ ಬೈರಪ್ಪನವರ ಸಾಹಿತ್ಯ ಉರ್ದು,ಸಂಸ್ಕೃತ,ಇಂಗ್ಲೀಷ್, ಮರಾಠಿ,ಗುಜರಾತಿ, ಬೆಂಗಾಲಿ ಸೇರಿದಂತೆ ಹಲವು ಭಾಷೆಗಳಿಗೆ ತರ್ಜುಮೆ ಗೊಂಡಿದೆ. ಹಿಂದಿ ಭಾಷೆಗೆ ಅನುವಾದಗೊಂಡ ಇವರ ಸಾಹಿತ್ಯ ಅಲ್ಲೂ ಇವರನ್ನು ಅತ್ಯುತ್ತಮ ಬರಹಗಾರರ ಸಾಲಿನಲ್ಲಿ ನಿಲ್ಲಿಸಿದೆ. 24ಕಾದಂಬರಿಗಳು, ಒಂದು ಆತ್ಮ ಕಥನ, 4ತತ್ವಶಾಸ್ತ್ರ ಸಾಹಿತ್ಯವನ್ನು ಬರೆದಿರುವ ಬೈರಪ್ಪ ನವರ "ಆವರಣ"ಮತ್ತು "ಕವಲು" ಕಾದಂಬರಿಗಳು ಬಿಡುಗಡೆಗೆ ಮುನ್ನವೇ ಸಂಚಲನ ಸೃಷ್ಟಿಸಿದವು. ಬಹುಶ: ಕನ್ನಡದ ಬೇರಾವ ಕೃತಿಗಳಿಗೆ ಮತ್ತು ಲೇಖಕರಿಗೆ ಈ ಮಟ್ಟದ ಪ್ರೋತ್ಸಾಹ ದೊರೆತಿರಲಾರದು.   ಸಾಹಿತ್ಯ ಕೃಷಿಗೂ ಮುನ್ನ ಬಾಲ್ಯದಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮಕ್ಕೂ ದುಮುಕಿ ದೇಶ ಪ್ರೇಮ ಮೆರೆದ ಅಸೀಮ ವ್ಯಕ್ತಿತ್ವ ಬೈರಪ್ಪನವರದ್ದು.   ಇದು ಅಸಲು ಸಂಗತಿ ಹೀಗಿರುವಾಗ ಕವಿಗಳನ್ನು ಸಾಹಿತಿಗಳನ್ನು ಏಕ ದೃಷ್ಠಿಕೋನದಿಂದ ಅಳೆಯುವುದು ಸರಿಯೇ? 
           ಬೈರಪ್ಪ ಮತ್ತು ಕಂಬಾರ ಅವರವರ ನೆಲೆಗಟ್ಟಿನಲ್ಲಿ ಕನ್ನಡ ಸಾರಸ್ವತ ಲೋಕಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಆದರೆ ಅವರ ವೈಯುಕ್ತಿಕ ವಿಚಾರಗಳು, ಜಾತೀಯ ಹಿನ್ನೆಲೆ ಒಂದು ಸಂಭ್ರಮವನ್ನು ಹಾಳು ಮಾಡಬಾರದಲ್ಲವೇ? ಪ್ರಶಸ್ತಿ ದಕ್ಕಿದ ಸಂಧರ್ಭದಲ್ಲಿ ಇವೆಲ್ಲಾ ಬೇಕಾ ಹೇಳಿ? ಇದುವರೆಗೆ ಪ್ರಶಸ್ತಿ ದಕ್ಕಿಸಿಕೊಂಡವರಲ್ಲಿ ಇಂತಹ ಅಸಹಜವಾದ ಮುಜುಗುರಕ್ಕೆ ಒಳಗಾಗಿದ್ದು ಕುವೆಂಪು ಮತ್ತು ಕಂಬಾರ ಮಾತ್ರವಲ್ಲ ಯು ಆರ್ ಅನಂತ ಮೂರ್ತಿ ಹಾಗೂ ಗಿರೀಶ್ ಕಾರ್ನಾಡರಿಗೆ ಪ್ರಶಸ್ತಿ ಬಂದಾಗಲೂ ಹೊಟ್ಟೆಕಿಚ್ಚಿನ ಒಂದು ವರ್ಗ "ಲಾಬಿ" ಮಾಡಿ ಪ್ರಶಸ್ತಿ ಗಿಟ್ಟಿಸಿಕೊಂಡವರೆಂಬ ಹಣೆ ಪಟ್ಟಿ ಕಟ್ಟಿತ್ತು. ಕನ್ನಡಕ್ಕೆ ಇನ್ನೂ ಹೆಚ್ಚಿನ ಜ್ಞಾನಪೀಠಗಳು ಬರಬೇಕಿದೆ ಸಧ್ಯ ಜ್ಞಾನಪೀಠ ಪಡೆದಿರುವವರಲ್ಲಿ 2ನೇ ಸ್ಥಾನದಲ್ಲಿರುವ ಹಿಂದಿಗಿಂತಲೂ  ಕನ್ನಡ 2ಪ್ರಶಸ್ತಿಗಳಿಂದ ಮೇಲಿದೆ, ನಾವಿನ್ನೂ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವನ್ನು ದಕ್ಕಿಸಿಕೊಳ್ಳಲಾಗಿಲ್ಲ, ಇಂತಹ ಸಂಧರ್ಭದಲ್ಲಾದರೂ ಒಗ್ಗೂಡಿ ಶಾಸ್ತ್ರೀಯ ಸ್ಥಾನಮಾನಕ್ಕೆ ಹಕ್ಕೊತ್ತಾಯ ಮಂಡಿಸುವುದನ್ನು ಬಿಟ್ಟು ಇದೆಂಥದು ಕೆಸರೆರಚಾಟ? ಇನ್ನಾದರೂ ಮೂರ್ಖರು ಬುದ್ದಿ ಕಲಿಯಬಾರದೇ?

Sunday, October 9, 2011

ಅಣ್ಣಾಹಜಾರೆ ಮತ್ತು ತಂಡಕ್ಕೆ ಇದೆಲ್ಲಾ ಬೇಕಿತ್ತಾ?

ಒಂದು ಕನಸು, ಒಂದು ನಿರೀಕ್ಷೆ, ಒಂದು ಕೆಚ್ಚು, ಒಂದು ನಂಬಿಕೆ ಹೀಗೆ ಎಲ್ಲವನ್ನೂ ಹುಸಿಗೊಳಿಸುವ ಮತ್ತು ಮನಸ್ಸಿಗೆ ಆಘಾತ ವಾಗುವಂತಹ ವಿದ್ಯಮಾನಗಳು ಈಗ ಘಟಿಸುತ್ತಿವೆ. ಗಾಂಧೀ ಮಾರ್ಗದಲ್ಲಿ ಆರಂಭಗೊಂಡ ಚಳುವಳಿಯೊಂದು ಇಷ್ಟು ಬೇಗ ದಿಕ್ಕು ತಪ್ಪ ಬಹುದೆಂದು ಯಾರೂ ನಿರೀಕ್ಷಿಸಿರಲಿಕ್ಕಿಲ್ಲ ಆದಾಗ್ಯೂ ಜನಲೋಕಪಾಲ ಮಸೂದೆ ಅನುಷ್ಠಾನಕ್ಕೆ ಒತ್ತಾಯಿಸಿ ನಡೆಯುತ್ತಿದ್ದ ಚಳುವಳಿ ಪೀಕ್ ಪಾಯಿಂಟ್ ತಲುಪಿದಾಗ, ಚಳುವಳಿಯ ಅಂತಿಮ ಸ್ವರೂಪ ಏನು? ಅಣ್ಣಾ ಮತ್ತು ತಂಡ ಚಳುವಳಿಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲವನ್ನ ಹೇಗೆ ಕಾಯ್ದು ಕೊಳ್ಳುತ್ತದೆ? ಎಂಬ ಪ್ರಶ್ನೆಯನ್ನು ಕೆಲವು ಬುದ್ದಿ ಜೀವಿಗಳು ಎತ್ತಿದ್ದರು. ಹಾಗೆಯೇ ಚಳುವಳಿಯೊಂದು ದಿಕ್ಕು ತಪ್ಪಿ ಆಶಯಗಳು ನೆನೆಗುದಿಗೆ ಬೀಳುವ ಬಗ್ಗೆಯೂ ಆತಂಕವಿತ್ತು. ಈಗ ಅಣ್ಣಾ ತಂಡದ ಕ್ರೇಜಿವಾಲ್ ಮತ್ತು ಕಿರಣ್ ಬೇಡಿ ಸಾರ್ವಜನಿಕ ಆತಂಕವನ್ನು ನಿಜವಾಗಿಸುತ್ತಿದ್ದಾರೆ. ಇದರ ಹಿಂದೆ ಜನಸಾಮಾನ್ಯರಿಗೆ ತಿಳಿಯದ ಹುನ್ನಾರವೂ ಸಹಾ ಇರಬಹುದೆಂಬ ಅನುಮಾನ ವ್ಯಕ್ತವಾಗಲಾರಂಬಿಸಿದೆ. ನಮ್ಮ ದೇಶದ ಮಟ್ಟಿಗೆ ಇದು ಭ್ರಷ್ಟಾಚಾರದ ವಿರುದ್ದದ ಚಳುವಳಿ ಇರಬಹುದು ಇತರೆ ಚಳುವಳಿಗಳಿರಬಹುದು , ಎಲ್ಲವುಗಳ ಹಿಂದೆಯೂ ಅಪಾಯಕಾರಿ ಹಾಗೂ ಸರ್ವ ಸಮ್ಮತವಲ್ಲದ ಗುರಿಗಳ ಈಡೇರಿಕೆಗೆ ಕೆಲವು ಚಳುವಳಿಗಳು ಬಳಕೆಯಾಗುತ್ತಿರುವುದು ಅತ್ಯಂತ ವಿಷಾಧನೀಯಕರ ಸಂಗತಿ.
           ದೇಶದ 1,210,193,422ಮಿಲಿಯನ್ ಜನಸಂಖ್ಯೆಯ ಬಹುಪಾಲು ಜನರ ಆಶೋತ್ತರದ ಪ್ರತೀಕವಾಗಿದ್ದ ಅಣ್ಣಾ ತಂಡದ ನಿಲುವು ಈಗ ರಾಜಕೀಯ ಶಕ್ತಿಯಾಗಿ ಬದಲಾಗುವ ಸೂಚನೆ ನೀಡಿದೆ. ರಾಜಕೀಯ ಶಕ್ತಿ ಯಾವುದೇ ಹೋರಾಟಕ್ಕೆ ಹೆಚ್ಚಿನ ಒತ್ತು ನೀಡುತ್ತದೆ ಎಂಬುದು ಒಪ್ಪ ತಕ್ಕ ಮಾತೆ ಆಗಿದೆ. ಆದರೆ ರಾಜಕೀಯದ ನೆವದಲ್ಲಿ,ಸದುದ್ದೇಶಕ್ಕೆ ಒಗ್ಗೂಡಿಸಿದ ಶಕ್ತಿಯನ್ನು, ಜನರ ಭಾವನೆಗಳನ್ನು ಒಮ್ಮೆಲೆ ತೂರಿ ಬಿಡುವುದನ್ನು ಅರಗಿಸಿಕೊಳ್ಳಲಾಗದು ಹಾಗೂ ಒಪ್ಪಿಕೊಳ್ಳಲಾಗದು. ಅಣ್ಣಾ ತಂಡ ಜನ್ ಲೋಕಪಾಲ ಮಸೂದೆಯನ್ನು ಒಪ್ಪದ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ ಎಂಬ ಘೋಷಣೆಯನ್ನು ಹೊರಡಿಸಿದೆ, ಇದಕ್ಕಾಗಿ ಕಿರಣ್ ಬೇಡಿ ಹಾಗೂ ಅರವಿಂದ ಕ್ರೇಜೀವಾಲ್ ಬೇರೆ ಬೇರೆ ರಾಜ್ಯಗಳಿಂದ ಆಂಧೋಲನ ಆರಂಭಿಸಿದ್ದಾರೆ. ಸದರಿ ಆಂಧೋಲನದಲ್ಲಿ ಕಾಂಗ್ರೆಸ್ ತಿರಸ್ಕರಿಸಿ ಎಂದು ಅಣ್ಣಾ ಭಾಷಣ ಮಾಡಿದ್ದಾರೆನ್ನಲಾದ ಧ್ವನಿ ಮುದ್ರಿಕೆಯನ್ನು ಬಳಸಿಕೊಳ್ಳಲಾಗುತ್ತ್ದೆದೆಯಂತೆ! ಕಾಂಗ್ರೆಸ್ ತಿರಸ್ಕರಿಸಿ ಎಂದರೆ ಯಾವುದನ್ನು ಪುರಸ್ಕರಿಸಬೇಕು? ಉತ್ತರ ಬಹಳ ಸರಳ, ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಹವಣಿಸುತ್ತಿರುವ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕಾ? ಚುನಾವಣೆಗಳು ಹತ್ತಿರವಿರುವ ಸಂಧರ್ಭದಲ್ಲೇ ಅತ್ಯಂತ ಕೆಟ್ಟ ಆಡಳಿತ ನೀಡಿ ಕೋಮುವಾದಿ ಭಾವನೆಗಳನ್ನು ಪುರಸ್ಕರಿಸುವ ಮೂಲಕ  ಹೀನ ಚಾರಿತ್ರ್ಯ ಹೊಂದಿರುವ ಗುಜರಾತ್ ನ ಮುಖ್ಯ ಮಂತ್ರಿ ನರೇಂದ್ರ ಮೋದಿ, ತನ್ನ ಹೆಸರು ಪ್ರಧಾನಿ ಪಟ್ಟಕ್ಕೆ ಕೇಳಿ ಬರುತ್ತಿದ್ದಂತೆಯೇ  ಉಪವಾಸದ ಸೋಗಿನಲ್ಲಿ ತಾನೊಬ್ಬ ಸತ್ಪುರುಷನೆಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.ಈ  ಮೂಲಕ ಬಿಜೆಪಿ ಮೋದಿಯನ್ನು ಪ್ರಧಾನಿ ಪಟ್ಟಕ್ಕೆ ಪ್ರಸ್ತಾಪಿಸುತ್ತಾ ಚುನಾವಣೆಗಳನ್ನು ಎದುರು ನೋಡುತ್ತಿದೆ, ಹೀಗಿರುವಾಗ ಅಣ್ಣಾ ಹಜಾರೆಯಂತಹವರೇ ಕಾಂಗ್ರೆಸ್ ತಿರಸ್ಕರಿಸಿ ಎಂದು ಊರೂರು ತಿರುಗಿದರೆ ಇವರ ಆಂಧೋಲನವನ್ನು ಬೆಂಬಲಿಸಿದವರ ಕಥೆ ಏನಾಗಬೇಕು? 
            ಅಸಲಿಗೆ ಜನ ಲೋಕಪಾಲ ಮಸೂದೆಯ ಕರಡನ್ನು ತಯಾರಿಸಿದ್ದು ಶಾಂತಿಭೂಷಣ್ ಆದರೂ ಸಹಾ ಅದನ್ನು ಅಗತ್ಯಕ್ಕೆ ತಕ್ಕಂತೆ ತಿದ್ದಿ ಅಣ್ಣಾ ಹಜಾರೆಯನ್ನು ಹೈಜಾಕ್ ಮಾಡಿದವರು ಅರವಿಂದ ಕ್ರೇಜಿವಾಲ್ ಮತ್ತು ಕಿರಣ್ ಬೇಡಿ, ಅತ್ಯಂತ ನಾಟಕೀಯವಾಗಿ ನಡೆದು ಕೊಳ್ಳುವ ಮೂಲಕ ಸಾರ್ವಜನಿಕ ಅವಗಣನೆಗೂ ತುತ್ತಾಗಿದ್ದರು, ನಂತರದ ಬೆಳವಣಿಗೆಗಳಲ್ಲಿ ತಾವು ಸಂಸತ್ ಗೆ ಸ್ಪರ್ದಿಸುವ ಇಂಗಿತವನ್ನು ವ್ಯಕ್ತಪಡಿಸುವ ಮೂಲಕ ಈಗ ಭ್ರಷ್ಟಾಚಾರ ವಿರೋಧಿ ಆಂಧೋಲನವನ್ನ ಬದಿಗಿರಿಸಿ ಕಾಂಗ್ರೆಸ್ ತಿರಸ್ಕರಿಸಿ ಆಂಧೋಲನವನ್ನು ಮುನ್ನೆಡೆಸಲು ನಿಂತಿದ್ದಾರೆ ಅಂದರೆ ಇವರ ಹಿಂದಿರುವ ಶಕ್ತಿಗಳು ಯಾವುದು ಎಂಬುದು ಯಾರಿಗೂ ತಿಳಿಯದ ಸಂಗತಿಯಲ್ಲ ಅಲ್ಲವೇ? ಅಣ್ಣಾ ಟೀಂ ಈಗ ಒಟ್ಟಾಗಿ ಉಳಿದಿಲ್ಲ ಎಂಬ ಸಂಗತಿಯೂ ಬೇಸರದ ಸಂಗತಿಯೇ ಆಗಿದೆ, ಸ್ಪಷ್ಟ ನಿಲುವಿಲ್ಲದೆ, ಒಗ್ಗೂಡಿದ ಶಕ್ತಿಯನ್ನು ವೈಯುಕ್ತಿಕ ಉದ್ದೇಶಕ್ಕೆ ಬಳಸಿಕೊಳ್ಳುವುದು ಎಷ್ಟು ಸರಿ? ಅಣ್ಣಾ ಮತ್ತು ಅವರ ತಂಡ ರಾಜಕೀಯ ಶಕ್ತಿಯಾಗಿ ಬದಲಾಗುವುದಾದರೆ ಜನ ಲೋಕಪಾಲ ಮಸೂದೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಲು ಒಮ್ಮತದ ನಿರ್ಣಯ ಕೈಗೊಂಡ ಎಲ್ಲಾ ರಾಜಕೀಯ ಪಕ್ಷಗಳ ವಿರುದ್ದವೂ ಸಮರ ಸಾರಬೇಕಲ್ಲವೇ? ಆದರೆ ವಾಸ್ತವದಲ್ಲಿ ಯಾಕೆ ಅಂತಹ ನಿಲುವು ವ್ಯಕ್ತವಾಗಿಲ್ಲ. ಅಣ್ಣಾ ಹಜಾರೆಯ ಉಪವಾಸದ ಅಂತಿಮ ದಿನಗಳಲ್ಲಿ ಪ್ರಧಾನಿ ಮತ್ತು ನ್ಯಾಯಾಂಗ ವ್ಯವಸ್ಥೆಗಿಂತ ಜನ ಲೋಕಪಾಲ ಸುಪ್ರೀಂ ಆಗುವುದು ಮತ್ತು ಆ ಮೂಲಕ ದೇಶದ ಸಂವಿಧಾನದ ಆಶಯಕ್ಕೆ ಪರ್ಯಾಯವನ್ನು ಸೃಷ್ಠಿಸುವ ಕ್ರಿಯೆಯನ್ನು ಪ್ರಮುಖ ವಿರೋಧ ಪಕ್ಷ ಬಿಜೆಪಿ ಯೂ ಸಹಾ ಒಪ್ಪಿಕೊಳ್ಳಲಿಲ್ಲ. ಅದರಂತೆ ಇತರೆ ರಾಜಕೀಯ ಪಕ್ಷಗಳು ಸಹಾ. ಹೀಗಿರುವಾಗ ಕೇವಲ ಕಾಂಗ್ರೆಸ್ ಒಂದನ್ನೇ ಯಾಕೆ ತಿರಸ್ಕರಿಸಬೇಕು? ಜನ ಲೋಕಪಾಲ ಮಸೂದೆ ತಿರಸ್ಕೃತವಾಗಿ ಪರಿಷ್ಕೃತ ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಸರ್ವಸಮ್ಮತ ನಿಲುವಿನೊಂದಿಗೆ ಒಪ್ಪಿಕೊಳ್ಳಲಾಗಿದೆ. ಇದನ್ನು ಅಣ್ಣಾ ಮತ್ತವರ ತಂಡವು ಒಪ್ಪಿದೆ ಹೀಗಿರುವಾಗ ಏಕಾಏಕಿ ಪಕ್ಷವೊಂದರ ವಿರುದ್ದ ಆಂಧೋಲನ ನಡೆಸುವುದನ್ನು ಏನೆನ್ನಬೇಕು ಹೇಳಿ? ಅಂದರೆ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಕಾಂಗ್ರೆಸ್ ವಿರೋಧಿ ಆಂಧೊಲನವನ್ನ ನಡೆಸಿದಲ್ಲಿ ಈ ಮೊದಲಿನ ಒಪ್ಪಂದದ ಕಥೆ ಏನಾಗುತ್ತೇ ಅನ್ನೋ ಪರಿಜ್ಞಾನವಿದ್ದರೂ ಲೋಕಪಾಲ ಮಸೂದೆ ಜಾರಿಯಾಗಬಾರದು ಎಂಬ ನಿಲುವನ್ನು ಅಣ್ಣಾ ತಂಡವೇ ತಳೆದಂತೆ ಆಗಲಿಲ್ಲವೇ? ಅಲ್ಲಿಗೆ ಕಳೆದ ನಾಲ್ಕು ದಶಕಗಳಿಂದ ನಡೆದುಕೊಂಡು ಬಂದ ಹೋರಾಟಕ್ಕೆ, ಗಾಂಧಿ ಮಾರ್ಗದ ಚಳುವಳಿಗೆ ಯಾವ ಮರ್ಯಾದೆ ಸಿಕ್ಕಂತಾಯಿತು? ಅಣ್ಣಾ ಹಜಾರೆಗೆ ಮತ್ತು ಅವರ ತಂಡಕ್ಕೆ ಇದೆಲ್ಲಾ ಬೇಕಿತ್ತಾ? 
          ಪ್ರಸಕ್ತ ದಿನಗಳಲ್ಲಿ ಚಳುವಳಿಗಳು ಮತ್ತು ಅದರ ಆಶಯಗಳು ಯಾಕೆ ಸಾಯುತ್ತಿವೆ ? ಎಂಬ ಪ್ರಶ್ನೆಗೆ ಅಣ್ಣಾಹಜಾರೆ ನಿಲುವು ಸದ್ಯದ ಪರಿಸ್ಥಿತಿಯಲ್ಲಿ ಉತ್ತರವಾಗ ಬಹುದೇನೋ. ಒಂದು ಪ್ರಾಮಾಣಿಕ ಚಳುವಳಿಯ ಹಿಂದೆ, ಅದನ್ನು ಬೆಂಬಲಿಸುವ ಮನಸ್ಸುಗಳ ಆಶಯವನ್ನು ದಿಕ್ಕುತಪ್ಪಿಸುವ ಪ್ರಕ್ರಿಯೆಗಳು ಯಾವ ಕಾರಣಕ್ಕೂ ನಡೆಯಬಾರದು. ಇದು ಅಭಿವೃದ್ದಿ ಶೀಲ ರಾಷ್ಟ್ರದ ಪ್ರಗತಿಗೂ ಕುಂಠಿತವಾಗುವುದಲ್ಲದೇ ದೇಶದಲ್ಲಿ ಅರಾಜಕತಗೆ ಸೃಷ್ಟಿಯಾಗುತ್ತದೆ ಅಲ್ಲವೇ?

Sunday, September 11, 2011

ದರ್ಶನ್ ಪ್ರಕರಣ;ನೈತಿಕ ಅಧ:ಪತನದ ಸಂಕೇತ!

ಅಪ್ಪ ಚಿತ್ರರಂಗದಲ್ಲಿ ವಿಲನ್ ಆದ್ರೆ ಮಗ ನಿಜ ಜೀವನದಲ್ಲಿ ವಿಲನ್ ! ಹೌದು ಕಳೆದ 2ದಿನಗಳಿಂದ ದೃಶ್ಯ ಮಾದ್ಯಮಗಳಲ್ಲಿ ಇದೇ ಸುದ್ದಿಯ ವೈಭವೀಕರಣ ನಡೆಯುತ್ತಿದೆ. ಸಾರ್ವಜನಿಕ ಜೀವನದಲ್ಲಿರುವ ನಟನೊಬ್ಬನ ಖಾಸಗಿ ಬದುಕಿನ ತಲ್ಲಣ ಬೀದಿಗೆ ಬಿದ್ದಿದೆ, ಚಿತ್ರರಂಗದ ಗಣ್ಯರಿರಲಿ, ಅಭಿಮಾನಿಗಳ ಸಮೂಹದ ಹೆಸರಿನಲ್ಲಿ ಬೊಬ್ಬೆ ಹಾಕುತ್ತಿರುವ ಕೆಲ ಮಂದಿ ಬೇಷರತ್ ಗೆ ಆಗಿ ದರ್ಶನ್ ಬೆಂಬಲಕ್ಕೆ ನಿಂತು ಬಿಟ್ಟಿದ್ದಾರೆ. ದರ್ಶನ್-ವಿಜಯಲಕ್ಷ್ಮಿಯವರ ಖಾಸಗಿ ಬದುಕಿನ ಒಳನೋಟಗಳೇನೆ ಇದ್ದರು ಅದು ಬೀದಿಗೆ ಬೀಳಬಾರದಿತ್ತು. ಇರಲಿ ಇಂತಹವರನ್ನು ಬೆಂಬಲಿಸುವ ಸಮೂಹ ಸನ್ನಿ ಮಾತ್ರ ಅತ್ಯಂತ ವಿಷಾಧನೀಯ ಸಂಗತಿ. ಸೆಲೆಬ್ರಿಟಿ ಗಳಾದವರನ್ನು ಹಿಂದೂ ಮುಂದೇ ನೋಡದೇ ಅಂದಾನುಕರಣೆ ಮಾಡುವುದು, ತೆರೆಯ ಮೇಲೆ ಇರುವ ಆತನ ಬದುಕನ್ನೇ ಆದರ್ಶವೆಂದು ಭ್ರಮಿಸುವುದು ನಮ್ಮ ಜನರ ಟಿಪಿಕಲ್ ಗುಣ. ಇಂತಹ ಸನ್ನಿವೇಶದಲ್ಲಿ ತಪ್ಪು ಸರಿಗಳ ಆಯ್ಕೆಗಿಂತ ಯಾವುದನ್ನು ಬೆಂಬಲಿಸ ಬೇಕು ಎಂಬುದನ್ನು ಸಹಾ ಜನರ ಅರಿಯುವುದು ಒಳಿತೇನೋ.

        ಒಬ್ಬ ವ್ಯಕ್ತಿ ಯಶಸ್ಸು ಸಾಧಿಸಿದಾಗ ಊರ ಮಂದಿಯೆಲ್ಲ ಆತನ ಹಿಂದೆ ಇರುತ್ತಾರಂತೆ, ಹಾಗೆಯೇ ಸೋತಾಗ ಆತನ ನೆರಳು ಸಹಾ ಆತನನ್ನು ಹಿಂಬಾಲಿಸದು ಎಂಬ ಮಾತಿದೆ. ಆದರೆ ಇದಕ್ಕೆ ತದ್ವಿರುದ್ದವಾಗಿ ಇವತ್ತು ದರ್ಶನ್ ಹಿಂದೆ  ಅಭಿಮಾನದ "ಪೊರ್ಕಿ" ದಂಡು ಇದೆ. ದರ್ಶನ್ ಸಾರ್ವಜನಿಕವಾಗಿ ಒಬ್ಬ ಸಭ್ಯ ನಟ, ಕಷ್ಟಪಟ್ಟು ಮೇಲೆ ಬಂದ ಯಶಸ್ವಿ ನಟ. ಇವತ್ತು ಚಿತ್ರರಂಗದಲ್ಲಿ ಮಿಂಚಲು ಹಿಂದಿನಂತೆ ಸಾಧನೆ-ಶ್ರಮ-ಚೆಲುವು ಈ ಮೂರೂ ಬೇಕಿಲ್ಲ.  ಜೇಬು ತುಂಬಾ ದುಡ್ಡು ಇದ್ದರೆ ಮದ್ಯ ವಯಸ್ಕನೂ ಇಲ್ಲಿ ನಾಯಕನಾಗಲೂ ಯಾವ ತಕರಾರೂ ಇಲ್ಲ ಆದರೆ ಪ್ರೇಕ್ಷಕ ಪ್ರಭು ಮಾತ್ರ ತನಗೆ ಇಷ್ಟ ಬಂದದ್ದನ್ನು ಆಯ್ಕೆ ಮಾಡಿಕೊಂಡು ಸರಿಯಾದ ಪಾಠ ಕಲಿಸುತ್ತಾನೆ.  ಇಂಥಹವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದೆ ಈ ನಡುವೆ ಹಳಬರು ತಮ್ಮ  ಛಾರ್ಮನ್ನು ಹಾಗೆಯೇ ಉಳಿಸಿಕೊಂಡು ಬಂದಿದ್ದಾರೆ, ಈ ಪೈಕಿ ಪುನೀತ್ ರಾಜ್ ಕುಮಾರ್, ಸುದೀಪ್, ಶಿವರಾಜ್ ಕುಮಾರ್, ರವಿಚಂದ್ರನ್,ದರ್ಶನ್ ಮತ್ತು  ಪ್ರೇಮ್ ಮತ್ತಿತರರು ಇದ್ದಾರೆ. 
      
          ಚಿತ್ರರಂಗ ಬೆಳೆದಂತೆಲ್ಲ ತಾರೆಯರ ಸಂಭಾವನೆಯೂ ಏರುತ್ತಿದೆ, ಹೀಗೆ ಹಣ ಬಂದಾಗ ಅದನ್ನೆಲ್ಲ ಐಷಾರಾಮಿ ಜೀವನಕ್ಕೆ ವೆಚ್ಚ ಮಾಡಿಕೊಂಡು ತಮ್ಮದೇ ಸಿನಿಮಾ ತಯಾರಿಕಾ ಸಂಸ್ಥೆಯನ್ನು ಹುಟ್ಟುಹಾಕಿ ನಿರ್ದೇಶನಕ್ಕೆ ಇಳಿದು ಬಿಡುವವರೂ ಇದ್ದಾರೆ. ಹೀಗೆ ದುಡ್ಡು ಹೆಚ್ಚಿದಂತೆ ವೈಯುಕ್ತಿಕ ಮಟ್ಟದ ಈಗೋ ಸಹಾ ಬೆಳೆಯುತ್ತಿದೆ, ಪರಿಣಾಮ ನೈತಿಕ ಅಧ:ಪತನದಂತಹ ವಿಷಯಗಳು ಬೆಳಕಿಗೆ ಬರುತ್ತಿವೆ. ನಾಗತ್ತಿಹಳ್ಳಿ ಚಂದ್ರಶೇಖರ್-ಐಂದ್ರಿತಾ ಪ್ರಕರಣ, ದುನಿಯಾವಿಜಿ-ಶುಭಾಪೂಂಜ ಪ್ರಕರಣ, ದಿವಂಗತ  ಮೈಸೂರು ಲೋಕೇಶ್ ಪುತ್ರ ಆದಿಲೋಕೇಶನ sexual harassment ಪ್ರಕರಣ, ಮುಂಗಾರು ಮಳೆಯ ಗಣೇಶನ ವಿವಾದಾತ್ಮಕ ಮದುವೆ! ಹಾಸ್ಯ ನಟ ಶರಣ್ ಹಾಗೂ ಛಾಯಾಗ್ರಾಹಕ ವೇಣು ತಮ್ಮ ಮದುವೆ ಸಂಧರ್ಭ ಕೇಳಿಬಂದ ರಂಕಿನ ಕಥೆಗಳು,ಶೃತಿ-ಮಹೇಂದರ್ ನಡುವಿನ ವಿಭಜನೆ!ಸಿನಿಮಾ ಶೂಟಿಂಗ್ ಗೆ ತೆರಳಿದ್ದ ದಿಗಂತ್ ಅಮೇರಿಕಾದಲ್ಲಿ ಮಾಡಿಕೊಂಡರೆನ್ನಲಾದ ಅಪಸವ್ಯ, ನಿರ್ದೇಶಕ ನಾರಾಯಣ ತನ್ನ ತಂದೆ-ತಾಯಿಯರನ್ನೇ ಹೊರಗಟ್ಟಿದ್ದಾರೆ  ಹೀಗೆ ಹತ್ತು ಹಲವು ಘಟನೆಗಳು ನಮ್ಮ ಕಣ್ಣ ಮುಂದಿವೆ. ತೆರೆಯ ಮೇಲೆ ಪ್ರೇಕ್ಷಕರಿಗೆ ಸಜ್ಜನಿಕೆಯಿಂದ ಕಾಣಿಸಿಕೊಳ್ಳುವ  ಈ ಮಂದಿ ವೈಯುಕ್ತಿಕ ಬದುಕಿನಲ್ಲಿ ಅವರ ಈಗೋ ಅಥವ ತೆವಲಿನಿಂದಾಗಿ ಅಸಹ್ಯ ಎನಿಸುವಂತೆ ನಡೆದುಕೊಂಡು ಬಿಡುತ್ತಾರೆ. ನಮ್ಮ ಜನರೂ ಅಷ್ಟೇ ತೆರೆಯ ಮೇಲಿನದ್ದೇ ಜೀವನ ನಂಬಿ ಕೊಂಡು ಬದುಕುವ ಮತ್ತು ತಮ್ಮ ಜೀವನದಲ್ಲಿ ಪಾಲಿಸುವ ಹುಕಿಗೆ ಬೀಳುವ ಜನ..

         ಇವತ್ತು ಸಿನಿಮಾಗಳು ಅತ್ಯಂತ ಪರಿಣಾಮಕಾರಿಯಾದ ಸಂವಹನ ಮಾದ್ಯಮ. ಅಲ್ಲಿ ಜನ-ಜೀವನ ಮತ್ತು ಅವರ ಮನಸ್ಥಿತಿಯನ್ನಾಧರಿಸಿದ ಕಥೆಗಳು ಮತ್ತು ಪಾತ್ರಗಳನ್ನೆ ಸೃಜಿಸಿ ತೆರೆಯ ಮೇಲೆ ಅನಾವರಣ ಮಾಡಲಾಗುತ್ತಿದೆ. ಅದು ಈಗಷ್ಟೇ ಅಲ್ಲ ಚಿತ್ರರಂಗದ ಆರಂಭದ ದಿನಗಳಿಂದಲೂ ಇಂತಹ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಒಂದು ಚಿತ್ರ ಎಷ್ಟು ನೈಜವಾಗಿರುತ್ತೆ ಎನ್ನುವುದಕ್ಕಿಂತ ಫ್ಯಾಂಟಸಿ ಬೆರೆತ ಚಿತ್ರಗಳನ್ನೇ ಹೆಚ್ಚು ಇಷ್ಟ ಪಡಲಾರಂಭಿಸುತ್ತಾರೆ. ಆ ಪಾತ್ರಗಳ ಮೂಲಕ ತಮ್ಮ ಪ್ರತಿನಿಧಿಯನ್ನು ಗುರುತಿಸಿಕೊಂಡು ಬಿಡುತ್ತಾರೆ. ದುರಂತವೆಂದರೆ ಅಂತಹವರು ಚುನಾವಣೆಗೂ ಅಭಿಮಾನವನ್ನ ಎನ್ ಕ್ಯಾಶ್ ಮಾಡಿಕೊಂಡು ಬಿಡುತ್ತಾರೆ. ದಕ್ಷಿಣ ಭಾರತದಲ್ಲಿ ವಿಶೇಷವಾಗಿ ತಮಿಳುನಾಡು ಮತ್ತು ಆಂದ್ರಪ್ರದೇಶದಲ್ಲಿ ಇಂತಹ ಹುಚ್ಚು ಅಭಿಮಾನ ಳಿದ್ದಾರೆ. ಕರ್ನಾಟಕದ ಮಟ್ಟಿಗೆ ಇಂತಹದ್ದೊಂದು ಅಪಾಯಕಾರಿ ಬೆಳವಣಿಗೆ ಆಗದಿದ್ದರೂ ಒಂದು ಚೌಕಟ್ಟಿನೊಳಗೆ ಎರಡು ಪರ್ವಗಳು ಮುಗಿದಿವೆ. ಒಂದು ಡಾ || ರಾಜ್, ಮತ್ತು ವಿಷ್ಣುವರ್ಧನ್. ಈ ಇಬ್ಬರೂ ಸಮಾಜಕ್ಕೆ ಮಾದರಿಯಾಗುವಂತೆ ಬದುಕಿದವರು, ತೆರೆಯ ಮೇಲಿನ ಬದುಕು ಹಾಗೂ ವೈಯುಕ್ತಿಕ ಬದುಕಿಗೆ ಸಾಮ್ಯ ವಿಟ್ಟುಕೊಂಡು ಆದರ್ಶ ಮೆರೆದವರು. ಇಂತಹ ಮೇರು ಆದರ್ಶಗಳ ನಡುವೆ ಪಡ್ಡೆ ಸಂಸ್ಕೃತಿಯನ್ನು ಹುಟ್ಟು ಹಾಕುವ ಸಿನಿಮಾಗಳ ಮೂಲಕ ಜನಪ್ರಿಯತೆಗೆ ಬಂದ ದರ್ಶನ್, ಗಣೇಶ್ ಸಿನಿಮಾ ಬಿಟ್ಟರೆ ತಮ್ಮ ಪಾಡಿಗೆ ತಾವು ಎಂದು ಬದುಕುತ್ತಿದ್ದಾರೆ. ಆದರೆ ದರ್ಶನ್ ತಮ್ಮ ವೈಯುಕ್ತಿಕ ಬದುಕಿನ ವಿಕೃತಿಯನ್ನು ಸಾರ್ವಜನಿಕವಾಗಿ ತೆರೆದಿಡುವ ಮೂಲಕ ದಿಗಿಲು ಹುಟ್ಟುವಂತೆ ನಡೆದುಕೊಂಡಿದ್ದಾರೆ. ಚಿತ್ರರಂಗದಲ್ಲಿ ಇದು ಮಾಮೂಲು ಎಂದು ಅಂದು ಕೊಳ್ಳಬಹುದಾದರೂ ನಾಯಕ ನಟನೊಬ್ಬನ ವಿಲನ್ ನಡವಳಿಕೆಗಳು ರೇಜಿಗೆ ಹುಟ್ಟಿಸುತ್ತಿವೆ. ಎಲ್ಲಕ್ಕಿಂತ ಹೆಚ್ಚಾಗಿ ಇಂತಹವರನ್ನು ಬೆಂಬಲಿಸುತ್ತಿರುವ ದಂಡು ದರ್ಶನ್ ಪತ್ನಿ ವಿಜಯಲಕ್ಷ್ಮಿಯವರನ್ನ ಸಾರ್ವಜನಿಕವಾಗಿ ತೆಗಳುವ ಮೂಲಕ ಅಪಮಾನಿಸುತ್ತಿರುವುದು ಸರಿಯಲ್ಲ. ಖಾಸಗಿ ಬದುಕು ಇಂದಲ್ಲ ನಾಳೆ ಸರಿಹೋಗಬಹುದು ಎಂಬ ದೂರದ ಆಸೆಯಲ್ಲೇ ವಿಜಯಲಕ್ಷ್ಮಿ ತಮ್ಮ ಹೇಳಿಕೆಗಳನ್ನು ನೋವಿನಲ್ಲೂ ಬದಲಿಸುತ್ತಿದ್ದಾರೆ ಅದು ಅವರ ವಿವೇಚನೆ!. ಆದರೆ ಇಂತಹ ವಿವೇಚನೆ ದರ್ಶನ್ ಅಭಿಮಾನಿಗಳಿಗಿಲ್ಲ, ಮತ್ತು ಆತನನ್ನು ಬೆಂಬಲಿಸುತ್ತಿರುವ ನಟರಿಗೂ ಇಲ್ಲ. 

      ಪ್ರಜ್ನಾವಂತ ವಲಯದಲ್ಲೂ   ಮಹಿಳೆ ಸಾಮಾಜಿಕವಾಗಿ ಇಂದಿಗೂ ಶೋಷಣೆಗೆ ಒಳಗಾಗಿದ್ದಾಳೆ ಮತ್ತು ಅಸಹನೆ ಬದುಕು ಸಾಗಿಸುತ್ತಿದ್ದಾಳೆ ಎಂಬುದಕ್ಕೆ ಈ ಪ್ರಕರಣ ಕೂಡ ಉದಾಹರಣೆ ಆಗಬಹುದು. ದರ್ಶನ್ ಪ್ರೀತಿಸಿ ಮದುವೆಯಾಗಿದ್ದರೂ ಕೂಡಾ ಪ್ರೀತಿಸಿದವಳ ಮೇಲೆಯೇ ಹಲ್ಲೆ ಮಾಡಿ ಚಪ್ಪಲಿಯಲ್ಲಿ ಹೊಡೆದು ಅಪಮಾನಿಸುವುದು ಎಂತಹ ನಾಗರೀಕತೆ? ಏನೂ ಅರಿಯದ ಮುಗ್ದ ಕಂದಮ್ಮನನ್ನು ಸಾಯಿಸಲು ಯತ್ನಿಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ. ಒಂದು ವೇಳೆ ಸದರಿ ಘಟನೆಯಲ್ಲಿ ಅನಾಹುತ ಸಂಭವಿಸಿದ್ದರೆ ದರ್ಶನ್ ಏನಾಗುತ್ತಿದ್ದ ಹೇಳಿ? ಇಂತಹದ್ದನ್ನೆಲ್ಲ ಅಭಿಮಾನಿ ವರ್ಗ ಯಾಕೆ ಬೆಂಬಲಿಸುತ್ತದೆ? ಅವರ ಖಾಸಗಿ ಬದುಕಿನ ಅನಾಹುತಗಳಿಗೆ ಅಭಿಮಾನಿ ಹೆಸರಿನ ಜವಾಬ್ದಾರಿ ಏಕೆ? ದರ್ಶನ್ ಇನ್ನೂ ಹಲವು ಚಿತ್ರಗಳಿಗೆ ಸಹಿ ಹಾಕಿದ್ದು ಕೆಲವು ಪೂರ್ಣಗೊಂಡಿವೆ ಮತ್ತೆ ಕೆಲವು  ಅರ್ಧ ಚಿತ್ರೀಕರಣವಾಗಿವೆ. ಹೇಗಿರುವಾಗ ಸದರಿ ಚಿತ್ರಗಳ ನಿರ್ಮಾಪಕರುಗಳೇ ದರ್ಶನ್ ಪರವಾದ ಟ್ರೆಂಡ್ ಹುಟ್ಟು ಹಾಕುವ ಮೂಲಕ ಜನರನ್ನು ಮಾದ್ಯಮಗಳ ಮೂಲಕ 'ಮಂಗ' ಮಾಡುತ್ತಿದ್ದಾರೆಯೇ ಎಂಬ ಅನುಮಾನವೂ ಮೂಡದಿರದು. ಒಟ್ಟಾರೆ ನೈತಿಕ ಅಧ:ಪತನದ ಈ ಅಂಶಗಳು ವಿನಾಕಾರಣ ಪ್ರಚಾರ ಪಡೆದುಕೊಳ್ಳ ತೊಡಗಿದೆಂತೆಲ್ಲಾ ಜನ ಅದಕ್ಕೆ ಮುಗಿಬಿದ್ದು ಸ್ಪಂದಿಸುವುದು ಸಾಂಸ್ಕೃತಿಕ ಪ್ರಜ್ಞೆಯ ದುರಂತವಲ್ಲವೇ?

Sunday, September 4, 2011

ಶಿಕ್ಷಕರ ದಿನಾಚರಣೆಯ ಪರಿಪೂರ್ಣತೆ ಹೇಗೆ?

ಇಂದು ಶಿಕ್ಷಕರ ದಿನ, ಶಿಕ್ಷಕ ಸ್ಥಾನಕ್ಕೆ ತನ್ನದೇ ಆದ ಘನತೆ-ಗೌರವಗಳಿವೆ. ಸಮಾಜದಲ್ಲಿ ತಂದೆ-ತಾಯಿಗಳ ನಂತರ ನೆನೆಯಬಹುದಾದ ಪ್ರಾತ:ಸ್ಮರಣೀಯರೆಂದರೆ ಶಿಕ್ಷಕರೇ ಆಗಿರುತ್ತಾರೆ. ಸದರಿ ಹುದ್ದೆಗೆ ಘನತೆ-ಗೌರವದ ಜೊತೆಗೆ ತನ್ನದೇ ಆದ ಔನ್ನತ್ಯವೂ ಸಹಾ ಇದ್ದರಷ್ಟೇ ವೃತ್ತಿಯ ಪಾವಿತ್ರ್ಯತೆ ಉಳಿಯಬಹುದು. ಸಮಾಜದಲ್ಲಿ ಶಿಕ್ಷಕ ಹುದ್ದೆಯೂ ಸಹಾ ಕಳಂಕಿತವಾಗುತ್ತಿರುವುದು ವಿಷಾಧನೀಯಕರ ಸಂಗತಿ. ನೈತಿಕ ಅಧ:ಪತನ ಹೊಂದಿದವರು, ವೃತ್ತಿಯ ಹೊಣೆಗಾರಿಕೆ ಅರಿವಿಲ್ಲದೇ ಹೊಟ್ಟೆ ಹೊರೆಯಲು ಶಿಕ್ಷಕ/ಕಿ ಯರಾಗಿ ಸೇರ್ಪಡೆಗೊಳ್ಳುತ್ತಿರುವುದು ಇದಕ್ಕೆ ಕಾರಣ ವಿರಬಹುದು. ಈ ನಡುವೆಯೇ ವೃತ್ತಿಯ ಪಾವಿತ್ರ್ಯ ಕಾಪಾಡುವ ಪ್ರಾಮಾಣಿಕರೂ ಇದ್ದಾರೆ. ಆದರೆ ಸಮುದಾಯದಲ್ಲಿ ಯಾರಾದರೊಬ್ಬ ಸಹದ್ಯೋಗಿ ಮಾಡುವ ಅನಾಚಾರಗಳಿಗೆ ಇಡೀ ಶಿಕ್ಷಕ ಸಮುದಾಯವನ್ನೇ ಪ್ರಶ್ನಾರ್ಥಕವಾಗಿ ನೋಡುವ ಪರಿಪಾಠ ಬೆಳೆಯುತ್ತಿರುವುದು ಒಳ್ಳೆಯ ಬೆಳವಣಿಗೆಯೇನಲ್ಲ. ಈ ಸಂಧರ್ಭ ಇಂತಹ ತಪ್ಪು-ಒಪ್ಪುಗಳ ಮಂಥನ ಅಗತ್ಯವಾಗಿದೆ.




ಸಮಾಜದಲ್ಲಿ ಶಿಕ್ಷಕ ಕೆಟ್ಟರೆ ಇಡೀ ವ್ಯವಸ್ಥೆಯೇ ಕೆಟ್ಟಂತೆ ಹಾಗಾಗಿ ತನ್ನ ತಪ್ಪು ದೊಡ್ಡದೇ ಇತರರು ತಪ್ಪು ಮಾಡುವುದಿಲ್ಲವೇ ಎಂದು ಕೈತೋರಿಸುವ ಹುಂಬ ಶಿಕ್ಷಕರುಗಳು ಇವತ್ತು ನಮ್ಮ ನಡುವೆಯೇ ಇದ್ದಾರೆ. ಇರಲಿ ಇದಕ್ಕೂ ಮುನ್ನ ಶಿಕ್ಷಕರ ದಿನ ಆಚರಣೆಯ ಕುರಿತ ಕೆಲವು ಕುತೂಹಲದ ಸಣ್ಣ ರಿಪೋರ್ಟು ನಿಮಗಾಗಿ. ಭಾರತದ ದೇಶದಲ್ಲಿ ಶಿಕ್ಷಕರ ದಿನಾಚರಣೆ ಆಚರಣೆಗೆ ಬಂದು ಇಲ್ಲಿಗೆ 49ವರ್ಷಗಳಾಗಿವೆ. ಇದು 50ನೇ ಶಿಕ್ಷಕರ ದಿನಾಚರಣೆ. ಎಲ್ಲರಿಗೂ ತಿಳಿದ ಹಾಗೆ ಭಾರತದ ರಾಷ್ಟ್ರಪತಿಯವರಾಗಿದ್ದ ಶ್ರೇಷ್ಠ ದಾರ್ಶನಿಕ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನವನ್ನೇ ದೇಶದಲ್ಲಿ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ರಾಧಾಕೃಷ್ಣನ್ ಒಬ್ಬ ಶ್ರೇಷ್ಠ ದಾರ್ಶನಿಕರಾಗಿ,ಆದರ್ಶನೀಯ ಶಿಕ್ಷಕರಾಗಿ ಸೇವೆ ಸಲ್ಲಿಸುವ ಹಂತದಲ್ಲೇ ರಾಷ್ಟ್ರದ ಅತ್ಯುನ್ನತ ಹುದ್ದೆಗೇರಿದವರು. ಮತ್ತು ಆ ಮೂಲಕ ಶಿಕ್ಷಕ ಹುದ್ದೆಯ ಸಾಧ್ಯತೆಗಳನ್ನು ಜಗತ್ತಿಗೆ ತೆರೆದಿಟ್ಟವರು. ಅಂದರೆ 'ಶಿಕ್ಷಕ' ಸ್ಥಾನಕ್ಕೆ ಇರುವ ಶ್ರೇಷ್ಠತೆಗಿಂತ ಬೇರೊಂದು ಸ್ಥಾನವಿಲ್ಲ ಆತ ವ್ಯವಸ್ಥೆಯ ನಿರ್ಮಾತೃ ಎಂಬುದಕ್ಕೆ ಇದಕ್ಕಿಂತ ಬೇರೆ ನಿದರ್ಶನಗಳು ಸಿಗಲು ಸಾಧ್ಯವಿಲ್ಲ. ನಮ್ಮ ದೇಶದಲ್ಲಿ ರಾಧಾಕೃಷ್ಣನ್ ರ ಜನ್ಮದಿನದಂದು ಶಿಕ್ಷಕ ದಿನ ಆಚರಿಸುವಂತೆಯೇ ಅರ್ಜೆಂಟಿನಾ ದೇಶದಲ್ಲಿ ದೊಮಿಂಗೊ ಫಾಸ್ಟಿನೋ ಎಂಬ ಶಿಕ್ಷಕ ನಿಧನರಾದ ದಿನ ಅಂದರೆ ಸೆ.11ರಂದು ಆಚರಿಸಲಾಗುತ್ತದೆ. ಅಂದರೆ 1915ರಿಂದಲೇ ಅಲ್ಲಿ ಶಿಕ್ಷಕ ದಿನಾಚರಣೆ ನಡೆಯುತ್ತದೆ. ಜಗತ್ತಿನ 70ಕ್ಕೂ ಹೆಚ್ಚು ದೇಶಗಳಲ್ಲಿ ಬೇರೆ ಬೇರೆ ದಿನಗಳಲ್ಲಿ ಶಿಕ್ಷಕರನ್ನು ನೆನೆಯುವ ದಿನಗಳಿವೆ. ಆದರೆ ವಿಶ್ವ ಸಂಸ್ಥೆಯ UNESCO ವಿಶ್ವ ಶಿಕ್ಷಕರ ದಿನಾಚರಣೆಯನ್ನು ಅಕ್ಟೋಬರ್ 5ರಂದು ಆಚರಿಸುತ್ತದೆ. ತೀರಾ ಇತ್ತೀಚೆಗೆ ಅಂದರೆ 1994ರಿಂದ ಇದು ಜಾರಿಗೆ ಬಂದಿದೆ.



ಮೊನ್ನೆ ಕಾಲೇಜೊಂದರ ಸಮಾರಂಭದ ವರದಿಗಾಗಿ ತೆರಳಿದ್ದೆ . ಠಾಕು ಠೀಕಾಗಿ ಡ್ರೆಸ್ ಮಾಡಿಕೊಂಡು ಟೈ ಬಿಗಿದು ಕೊಂಡು ನಿಂತಿದ್ದ ಒಬ್ಬ ಯುಜಿಸಿ ಉಪನ್ಯಾಸಕ ನಿರೂಪಣೆ ಮಾಡುತ್ತಿದ್ದರು. ಅವರು 'ಅ' ಕಾರ ಇರುವೆಡೆ 'ಹ'ಕಾರ, 'ಶ' ಕಾರವನ್ನು 'ಸ'ಕಾರವೆಂದು ಸಂಭೋಧಿಸುತ್ತಿದ್ದರು ಅಂದರೆ 'ಬಾಸಣ', 'ಸ್ರೀಯುತರು', 'ಹಬಿನಂದನೆಗಳು', ಸಂಯುಕ್ತ ಎಂಬುದನ್ನು 'ಸಯುಕ್ತ' ಇತ್ಯಾದಿ. ಅವರ ಪ್ರತೀ ಉಚ್ಚಾರಕ್ಕೂ ವಿದ್ಯಾರ್ಥಿಗಳು ಗೊಳ್ಳೆಂದು ನಗುತ್ತಿದ್ದರು ಆ ಪುಣ್ಯಾತ್ಮನಿಗೆ ಅದರ ಅರಿವಾಗಲಿಲ್ಲ ಅಷ್ಟೇ ಏಕೆ ವೇದಿಕೆಯಲ್ಲಿದ್ದ ಉಪನ್ಯಾಸಕರು/ಪ್ರಾಂಶುಪಾಲರು ಅದನ್ನು ಗಮನಿಸಿ ತಿಳಿ ಹೇಳುವ ಕೆಲಸ ಮಾಡಲಿಲ್ಲ. ಇನ್ನೊಂದು ಘಟನೆ ಹಳ್ಳಿಯೊಂದರೆ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರೋರ್ವರ ವಿರುದ್ದ ಶಾಲಾ ಮಕ್ಕಳು-ಪೋಷಕರು ಪ್ರತಿಭಟನೆ ನಡೆಸುತ್ತಿದ್ದರು, ಸ್ಥಳಕ್ಕೆ ಹೋದಾಗ ಸದರಿ ಮುಖ್ಯ ಶಿಕ್ಷಕನನ್ನು ಶಾಲಾ ಕೊಠಡಿಯೊಂದರಲ್ಲಿ ಕೂಡಿಹಾಕಲಾಗಿತ್ತು.ಹೆಣ್ಣು ಮಕ್ಕಳೊಂದಿಗೆ ಅನೈತಿಕವಾಗಿ ನಡೆದುಕೊಳ್ಳುತ್ತಾರೆ, ಆಶ್ಲೀಲ ಸಂಭಾಷಣೆ ಮಾಡುತ್ತಾರೆ, ಅಡುಗೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬುದು ಪ್ರಮುಖ ಆಪಾದನೆ. ಆತನ ಮುಖದಲ್ಲಿ ಕೊಂಚವೂ ಪಶ್ಚತ್ತಾಪ ಇರಲಿಲ್ಲ ಮತ್ತು ಅಂಜಿಕೆಯೂ ಇರಲಿಲ್ಲ ತನ್ನ ಹಿಂದೆ ಜಾತಿಯ ಬೆಂಬಲ ಮತ್ತು ರಾಜಕೀಯ ನಾಯಕರ ಬೆಂಬಲ ಇದೆ ಎಂಬುದೇ ಆತನ ಹುಂಬತನಕ್ಕೆ ಕಾರಣವಾಗಿತ್ತು. ಮತ್ತೊಂದು ಪ್ರಕರಣದಲ್ಲಿ ಶಾಲಾವರಣದಲ್ಲಿ ಶಿಕ್ಷಕಿಯೊಬ್ಬಾಕೆಯೊಂದಿಗೆ ಲಲ್ಲೆಗೆರೆಯುತ್ತಾ ಪೋರ್ಕಿಯಂತೆ ವೇಷಭೂಷಣ ಧರಿಸಿದ್ದ ಯುವಕನೊಬ್ಬ ಕಂಡ, ಮತ್ತೊಬ್ಬ ಕೈಗೆ ರೌಡಿ ಬಳೆಯಂತಹದ್ದೇನೋ ಕಟ್ಟಿಕೊಂಡು ಕ್ಯಾಪು ಹಾಕಿಕೊಂಡು ಹೆಣ್ಣು ಮಕ್ಕಳ ಮೈಮೇಲೆ ಕೈಯಾಡಿಸುತ್ತಾ ಸಾಗುತ್ತಿದ್ದ. ಶಾಲಾ ಕಛೇರಿಗೆ ಬಂದರೆ ಆಗಷ್ಟೇ ಬ್ಯೂಟಿಪಾರ್ಲರ್ ನಿಂದ ಬಂದಿದ್ದಾರೋ ಎನ್ನುವಂತೆ ಆಫ್ ತೋಳಿನ ಬ್ಲೌಸ್, ಪಾರದರ್ಶಕ ಉಡುಗೆ ಧರಿಸಿ, ಢಾಳಾಗಿ ಕೆಂಪು ಬಣ್ಣವನ್ನ ತುಟಿಗೆ ಮೆತ್ತಿಕೊಂಡ ಒಬ್ಬಾಕೆ ಕಂಡರು. ಜೊತೆಯಲ್ಲಿದ್ದ ಅಧಿಕಾರಿಯನ್ನು ಕೇಳಿದೆ ಯಾರಿವರು? ಇವರೆಲ್ಲ ಶಿಕ್ಷಕರು ಎಂದು ಆತ ಮೌನಕ್ಕೆ ಶರಣಾದರು. ಇನ್ನೊಂದು ಪ್ರಕರಣ ಹೇಳಲೇ ಬೇಕು ಅದು ಸಾರಿಗೆ ವ್ಯವಸ್ಥೆಯೂ ಇಲ್ಲದ ಹಳ್ಳಿಯೊಂದರ ಶಾಲೆ. ಅಲ್ಲಿಗೆ ಆ ಶಿಕ್ಷಕ ಬಂದಾಗ ಶಾಲಾವರಣದಲ್ಲಿ ಸೊಂಪಾಗಿ ಬೆಳೆದಿದ್ದ ಹುಲ್ಲನ್ನು ಮೇಯಲು ದನಗಳನ್ನು ಬಿಟ್ಟಿದ್ದರು. ಪ್ರತೀ ವರ್ಷ ಅಲ್ಲಿ ಬೆಳೆಯುವ ಹುಲ್ಲನ್ನು ಗ್ರಾಮಸ್ಥರು ಹರಾಜು ಹಾಕಿಕೊಳ್ಳುತ್ತಿದ್ದರಂತೆ. ಈ ಶಿಕ್ಷಕರು ಬಂದ ದಿನದಿಂದಲೇ ಶಾಲಾ ಪರಿಸರದಲ್ಲಿ ಬದಲಾವಣೆ ತಂದರು. ತಮ್ಮ ವಾಸ ಸ್ಥಳದ ದೇಗುಲವೇನೋ ಎಂಬಂತೆ ಒಪ್ಪ ಓರಣವಾಗಿ ಪರವರ್ತಿಸಿದರು. ಶಾಲೆಯ ಮುಖ ಕಾಣದೇ ದಿಕ್ಕು ತಪ್ಪಿದ್ದ ಮಕ್ಕಳನ್ನು ಶಾಲೆಗೆ ಕರೆದು ತಂದರು. ಸಮಯದ ಪರಿಗಣನೆ ತೆಗೆದುಕೊಳ್ಳದೇ ಬೆಳಿಗ್ಗೆ 7ಗಂಟೆಗೆಲ್ಲ ಶಾಲೆಗೆ ಹಾಜರಾಗುತ್ತಿದ್ದ ಆ ಉಪಾಧ್ಯಾಯ ಪ್ರತೀ ಮನೆಗೂ ಹೋಗಿ ಮಕ್ಕಳನ್ನು ಹುರಿದುಂಬಿಸಿ ಕರೆತರುತ್ತಿದ್ದರು, ಕೈ ತೋಟದ ಮಹತ್ವ, ಔಷಧ ಗಿಡಗಳ ಮಹತ್ವ ಹೇಳುತ್ತಾ, ಹಾಡು ಸಂಭಾಷಣೆಗಳ ಮುಖಾಂತರವೇ ಮಕ್ಕಳ ಮನಗೆದ್ದು ಅಧ್ಯಯನಕ್ಕೆ ತೊಡಗಿಸುತ್ತಿದ್ದರು. ಮೊದಲಿಗೆ ಶಿಕ್ಷಕರ ಜಾತಿಯ ಕಾರಣಕ್ಕೆ ಊರಿನಲ್ಲಿ ಹನಿ ನೀರನ್ನು ಕೊಡಲು ನಿರಾಕರಿಸುತ್ತಿದ್ದ ಗ್ರಾಮದ ಜನ ಕ್ರಮೇಣ ಮೇಸ್ಟ್ರ ಕಾರ್ಯ ತತ್ಪರತೆಗೆ ತಲೆದೂಗಿದರು. ಇವತ್ತು ಅಲ್ಲಿ ಕಲಿತ ಮಕ್ಕಳು ದೊಡ್ಡ ದೊಡ್ಡ ಹುದ್ದೆಗಳಲ್ಲಿದ್ದಾರೆ. ಇವತ್ತಿಗೂ ಪ್ರಾಥಮಿಕ ಶಾಲೆಯಲ್ಲಿ ತನ್ನನ್ನು ತಿದ್ದಿ ತೀಡಿದ ಆ ಶಿಕ್ಷಕರನ್ನ ನೆನೆಯುತ್ತಾರೆ.



ಆದರೆ ಎಷ್ಟು ಶಾಲೆಗಳಲ್ಲಿ ಇಂತಹ ವಾತಾವರಣವಿದೆ. ಇಷ್ಟು ಜನ ಶಿಕ್ಷಕರಿಗೆ ತಾವು ಮಾಡುವ ವೃತ್ತಿಯಲ್ಲಿ ಬದ್ದತೆಯಿದೆ ಎಂಬುದು ಇಲ್ಲಿ ಮುಖ್ಯವಾಗುತ್ತಿದೆ. ಭಾರತೀಯ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ, ಇದರಲ್ಲಿ ಬದಲಾವಣೆ ಬೇಕು ಎಂಬಿತ್ಯಾದಿ ಆರೋಪಗಳನ್ನ ಮಾಡಲಾಗುತ್ತದೆ ಆದರೆ ನಮ್ಮ ಶಿಕ್ಷಣದಲ್ಲಿ ನೈತಿಕತೆಯ ಅಂಶಗಳಿವೆ, ವ್ಯಕ್ತಿಗಳ ಪರಿಪೂರ್ಣ ವಿಕಾಸಕ್ಕೆ ಅಗತ್ಯವಿರುವ ಅವಕಾಶಗಳಿವೆ ಎಂಬುದನ್ನು ತಳ್ಳಿಹಾಕುವಂತಿಲ್ಲ. ಇಲ್ಲಿ ಕೊರತೆಗಳನ್ನು ದೊಡ್ಡದು ಮಾಡುವುದಕ್ಕಿಂತ ಇರುವ ಅವಕಾಶಗಳು ಹೇಗೆ ಸದ್ವಿನಿಯೋಗವಾಗುತ್ತಿದೆ ಎಂಬುದು ಮುಖ್ಯವಾಗುತ್ತದೆ. ಈಗಿನಂತೆ ಹಿಂದೆ ಶಿಕ್ಷಣಕ್ಕೆ ಹೆಚ್ಚಿನ ಮೂಲಭೂತ ಸವಲತ್ತುಗಳು ಇರಲಿಲ್ಲ ಆದರೆ ಇವತ್ತು ಸಾಕು ಎನಿಸುವಷ್ಟು ಸವಲತ್ತುಗಳಿವೆ, ಗುಣಮಟ್ಟದ ಶಿಕ್ಷಣ ಕಾಯ್ದು ಕೊಳ್ಳಲು ಉನ್ನತ ದರ್ಜೆ ಯಲ್ಲಿ ಉತ್ತೀರ್ಣರಾದವರನ್ನೇ ಶಿಕ್ಷಕರನ್ನಾಗಿ ಆಯ್ಕೆ ಮಾಡಲಾಗುತ್ತಿದೆ. ಹೆಚ್ಚುವರಿ ವೇತನ,ರಜೆ, ತರಬೇತಿ ಇತ್ಯಾದಿಗಳನ್ನು ಕೊಡಮಾಡಿದೆ ಆದರೆ ಫಲಿತಾಂಶ ಶೂನ್ಯ. ಸರ್ಕಾರಗಳು ಕೂಡ ವ್ಯತಿರಿಕ್ತ ಪರಿಣಾಮಗಳಿಗೆ ಕಾರಣವಾಗಿದೆ ಅಂದರೆ ವಿಶ್ವ ಬ್ಯಾಂಕ್ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳನ್ನು ಜಾರಿಗೆ ತಂದು ದುಡ್ಡು ಮಾಡಿಕೊಳ್ಳುವ ಹಪಾಹಪಿಗೆ ಬಿದ್ದು ಶೈಕ್ಷಣಿಕ ವ್ಯವಸ್ಥೆಯಲ್ಲಿ ವಿಕೇಂದ್ರೀಕರಣ ಮಾಡುವ ಮೂಲಕ ಅನಗತ್ಯವಾಗಿ ವಿವಿಧ ಹುದ್ದೆಗಳನ್ನು ಸೃಜಿಸುವ ಮೂಲಕ ಪಾಠ ಮಾಡಿಕೊಂಡಿರಬೇಕಾದ ಶಿಕ್ಷಕರುಗಳನ್ನು ತಂದು ಕೂರಿಸುತ್ತಿದೆ. ಇದು ಮೊದಲ ಯಡವಟ್ಟು. ಶಿಕ್ಷಕರುಗಳು ಪಾಠ ಮಾಡುವುದನ್ನು ಬಿಟ್ಟು ಅನ್ಯ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲು ಇದು ಕಾರಣವಾಗುತ್ತದೆ. ಇನ್ನು ಬಹುತೇಕ ಶಿಕ್ಷಕರುಗಳು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಶಾಲೆಯ ಪಾಠಕ್ಕಿಂತ ಮನೆ ಪಾಠದ ವ್ಯಾಪಾರಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ರಾಜಕೀಯ ದಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಬಿಡುತ್ತಾರೆ. ಪ್ರಶ್ನಿಸುವ ಮೇಲಧಿಕಾರಿಗಳ ವಿರುದ್ದ ಸ್ಥಳೀಯ ವ್ಯವಸ್ಥೆಯನ್ನೆ ಎತ್ತಿ ಕಟ್ಟಿಬಿಡುತ್ತಾರೆ. ಎಲ್ಲದಕ್ಕಿಂತ ದುರಂತವೆಂದರೆ ಶಿಕ್ಷಕರುಗಳು ಜಾತಿವಾರು ಶಿಕ್ಷಕ ಸಂಘಗಳನ್ನು ಮಾಡಿಕೊಳ್ಳುವುದು! ಹೀಗಾದರೆ ಸಮಾಜ ಕಟ್ಟುವುದು ಸಾಧ್ಯವೇ ? ಶಿಕ್ಷಕ ಸ್ಥಾನದ ಘನತೆ ಉಳಿಸಲು ಸಾಧ್ಯವೇ ?

Sunday, August 28, 2011

ಗಾಂಧೀ ಮಾರ್ಗಕ್ಕೆ ದಕ್ಕಿದ ಗೆಲುವು!

ಗಾಂಧೀ ಮಾರ್ಗದ ಅಹಿಂಸಾತ್ಮಕ ಹೋರಾಟಕ್ಕೆ ಆರೂವರೆ ದಶಕಗಳ ನಂತರ ಮೊದಲ ಹಂತದ ಗೆಲುವು ದಕ್ಕಿದೆ. ಅಷ್ಟರಮಟ್ಟಿಗೆ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಹೋರಾಟ ಮತ್ತು ಜನಲೋಕಪಾಲ್ ಮಸೂದೆಯ ಅನುಷ್ಠಾನದ ಆಗ್ರಹ ಗಟ್ಟಿತನವನ್ನ ಉಳಿಸಿಕೊಂಡಿದೆ. ಕಳೆದ ಏಪ್ರಿಲ್ ನಲ್ಲಿ ಜನಲೋಕಪಾಲ್ ಮಸೂದೆಯ ಕರಡು ರಚನೆಗೆ ಆಗ್ರಹಿಸಿ ಅಣ್ಣಾ ನೇತೃತ್ವದ ತಂಡ ಚಳುವಳಿ ನಡೆಸಿತ್ತು. ಆಗ ದೊರೆತ ಅಭೂತ ಪೂರ್ವ ಬೆಂಬಲವನ್ನ ಅನಾಮತ್ತಾಗಿ ಹೈಜಾಕ್ ಮಾಡಲು ಹೊರಟ ಯೋಗ ಗುರು ಬಾಬಾ ರಾಮದೇವ ನೈತಿಕತೆ ಕಳೆದುಕೊಂಡು ಮೂಲೆಗುಂಪಾಗಿದ್ದು ಈಗ ಇತಿಹಾಸ. ನೈತಿಕತೆಯನ್ನ, ಸಿದ್ದಾಂತವನ್ನ ಯಾವ ಚಳುವಳಿಗಳು ಉಳಿಸಿಕೊಳ್ಳುತ್ತವೋ ಅದಕ್ಕೆ ಯಾವತ್ತಿದ್ದರೂ ಗೆಲುವು ಎಂಬುದಕ್ಕೆ ಅಣ್ಣಾ ಹಜಾರೆಯ 13ದಿನಗಳ ಶಾಂತಿಯುತ ಉಪವಾಸ ಸತ್ಯಾಗ್ರಹ ಇವತ್ತು ನಮ್ಮ ಕಣ್ಣೆದುರಿಗಿದೆ. ಈ ಸಂಧರ್ಭದಲ್ಲಿ ಚಳುವಳಿಯ ಕುರಿತು ಬುದ್ದಿ ಜೀವಿಗಳೆನಿಸಿಕೊಂಡವರಿಂದ, ರಾಜಕೀಯ ಪಕ್ಷಗಳ ಮುಖಂಡರಿಂದ, ಅಧಿಕಾರ ರೂಢರಿಂದ ನಾನಾ ರೀತಿಯ ಟೀಕೆಗಳು ಮತ್ತು ವಿಮರ್ಶೆಗಳು ಬಂದಿವೆ. ಚಳುವಳಿಗಳಲ್ಲಿ ಎಂಥಹವರು ಪಾಲ್ಗೊಂಡರು? ಯಾರು ಎಷ್ಟೆಷ್ಟು ವಿಚಾರ ಅರಿತಿದ್ದರು?ಅಂಥಹವರು ಚಳುವಳಿಗೆ ಯಾಕೆ ಬಂದರು? ಅಷ್ಟಕ್ಕೂ ಲೋಕಪಾಲ ಮಸೂದೆ ಜಾರಿಗೆ ಬಂದ ತಕ್ಷಣ ಭ್ರಷ್ಟಾಚಾರದ ಭೂತ ಓಡಿಸಲು ಸಾಧ್ಯವಾದೀತೆ? ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡು ಕೊಳ್ಳುವ ಅವಶ್ಯಕತೆ ಇದೆ.


ಇವತ್ತು ವ್ಯಾಪಕವಾಗಿ ಚರ್ಚೆಯಾಗುತ್ತಿರುವ ಜನಲೋಕಪಾಲ್ ಮಸೂದೆಗೆ ನಾಲ್ಕೂವರೆ ದಶಕಗಳ ಇತಿಹಾಸವಿದೆ. ಆದಾಗ್ಯೂ ಅಧಿಕಾರ ಷಾಹಿಗಳ ಕುತಂತ್ರದಿಂದಾಗಿ ಅದಕ್ಕೊಂದು ಸ್ಪಷ್ಟರೂಪ ಕೊಡುವ ಪ್ರಯತ್ನಕ್ಕೆ ಸರಿಯಾದ್ದೊಂದು ಅವಕಾಶ ದಕ್ಕಿರಲಿಲ್ಲ.ಆದರೆ ಅಣ್ಣಾ ಹಜಾರೆ ನೇತೃತ್ವದಲ್ಲಿ ಬದ್ದತೆಯ ಹೋರಾಟಕ್ಕೆ ಕೊಂಚ ಮಟ್ಟಿಗೆ ಗೆಲುವು ಸಿಕ್ಕಿದೆ. ಜನಲೋಕಪಾಲ ಮಸೂದೆ ಜಾರಿಗೆ ಬಂದಾಕ್ಷಣ ದೇಶದ ಆಡಳಿತ ವ್ಯವಸ್ತೆಯಲ್ಲಿ ಅಭೂತಪೂರ್ವ ಬದಲಾವಣೆ ಆಗಿಬಿಡುತ್ತದೆ ಲಂಚದ ಸಮಸ್ಯೆ ನಿವಾರಣೆಯಾಗುತ್ತದೆ, ಸ್ವಿಸ್ ಬ್ಯಾಂಕಿನಲ್ಲಿ ಇಟ್ಟಿರುವ 1461ಕೋಟಿಗೂ ಹೆಚ್ಚಿನ ಬೇನಾಮಿ ಹಣ ಪುಕ್ಕಟ್ಟೆಯಾಗಿ ಸಿಕ್ಕುಬಿಡುತ್ತೆ ಅದನ್ನು ಪ್ರತೀ ಹಳ್ಳಿಗೆ ತಲಾ 61ಕೋಟಿಯಂತೆ ಹಂಚಬಹುದು, ಅಬಿವೃದ್ದಿ ಕಾರ್ಯಕ್ಕೆ ಬಳಸಬಹುದು, ಅದೆಷ್ಟೋ ವರ್ಷ ಪುಕ್ಕಟ್ಟೆಯಾಗಿ ವಿದ್ಯುತ್ ಸರಬರಾಜು ಮಾಡಬಹುದು ಆಗ ಭಾರತ ದೇಶದ ಭವಿಷ್ಯ ಉಜ್ವಲವಾಗಿ ಬಿಡುತ್ತೆ ಅನ್ನೊ ಮೂರ್ಖತನದ ಮೂರ್ಖರ ಎಸ್ ಎಂ ಎಸ್ ಗಳು ಹರಿದಾಡಿ ಬಿಟ್ಟವು ಲಾಭವಾಗಿದ್ದು ಮಾತ್ರ ಮೆಸೆಜು ಸರ್ವಿಸ್ ನೀಡಿದ ಮೊಬೈಲು ಕಂಪೆನಿಗಳಿಗೆ! ಅದೇ ರೀತಿ ಇನ್ನೊಂದು ಮೂರ್ಖರ ಗುಂಪು ಅಣ್ಣಾ ಹಜಾರೆ ಕೇವಲ 7ನೇ ತರಗತಿ ಓದಿದ ನಿರಕ್ಷರಕುಕ್ಷಿ, ಭೂಮಿಯ ಮೇಲಿನ ರಕ್ಕಸ! ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬರೆದಿರುವ ಸಂವಿಧಾನವನ್ನೇ ತಿದ್ದಲು ಆರ್ ಎಸ್ ಎಸ್ ನೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡ ಒಬ್ಬ ಕೋಮುವಾದಿ ಎಂದು ಜರೆಯುವ ಮೆಸೆಜನ್ನು ಕಿಡಿಗೇಡಿಗಳು ಹರಿಯ ಬಿಟ್ಟಿದ್ದರು. ವಿ.ಕ ದ ದೆಹಲಿಯ ಹಿರಿಯ ವರದಿಗಾರ ಉಮಾಪತಿ, ರಾಮಲೀಲಾ ಮೈದಾನದಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟದ ಸದವಕಾಶವನ್ನ ಮೀಸಲು ವಿರೋಧಿ ಗುಂಪು ಹೇಗೆ ಬಳಸಿಕೊಂಡು ಹೋರಾಟದ ಆಶಯವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂಬ ವಿಚಾರವನ್ನ ಬರೆದಿದ್ದರು. ಅಷ್ಟೇ ಅಲ್ಲ ವೈಯುಕ್ತಿವಾಗಿ ಭ್ರಷ್ಟರಾದವರು ಸಾರ್ವಜನಿಕವಾಗಿ ಸಾಮೂಹಿಕವ ನೆಲೆಗಟ್ಟಿನಲ್ಲಿ ಹೇಗೆ ಮುಖವಾಡ ಧರಿಸಿ ಬರುತ್ತಿದ್ದಾರೆ ಎಂಬ ಸಾಕಷ್ಟು ವಿಚಾರಗಳು ನಮ್ಮ ಕಣ್ಣೆದುರಿಗೆ ಬಂದು ಹೋದವು ತಾತ್ವಿಕ ನೆಲೆಗಟ್ಟಿಗೆ, ತಾರ್ಕಿದ ಸಂಘರ್ಷಕ್ಕೆ ಎಣೆಯಿಲ್ಲದಂತೆ ವಿವಿಧ ಮಜಲುಗಳಿಂದ ಹರಿದು ಬಂದ ಬೆಂಬಲ ಅಂತಿಮವಾಗಿ ಯಾವ ರೂಪ ತಳೆಯುತ್ತಿತ್ತೋ ಗೊತ್ತಿಲ್ಲ ಆದರೆ ಸ್ವತಂತ್ರ ಭಾರತದಲ್ಲಿ ಒಂದು ಜೆಪಿ ಚಳುವಳಿಯ ನಂತರ ನಡೆದ ದೊಡ್ಡ ಹೋರಾಟ ಇದು.

ನಮ್ಮ ಜನ ಸಿನಿಕರು, ಕಲ್ಪನೆಗಳ ಸಾಮ್ರಾಜ್ಯದಲ್ಲಿ ವಾಸ್ತವತೆಯನ್ನು ಮೀರಿ ನಿಂತ ವಿಚಾರಗಳನ್ನ ಅರ್ಥೈಸಿಕೊಳ್ಳಲಾಗದವರು ಏಕಾಏಕಿ ಬದಲಾವಣೆಗಳನ್ನು ನಿರೀಕ್ಷಿಸಿ ಬಿಡುತ್ತಾರೆ. ನಿಮಗೆ ನೆನಪಿರಲಿ ಇವತ್ತು ದೇಶದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕೆಂದೇ ಸರಿ ಸುಮಾರು 6 ಸಂಸ್ಥೆಗಳಿವೆ. ಆದಾಗ್ಯೂ ಭ್ರಷ್ಟಾಚಾರ ಎಂಬುದು ಇಲ್ಲಿಂದ ಖಾಲಿ ಆಗಿಲ್ಲ ಏಕೆಂದರೆ ಇವೆಲ್ಲಾ ಹಲ್ಲು ಕಿತ್ತ ಹಾವುಗಳು! ಇವನ್ನು ಮೀರಿದ ಲೋಕಪಾಲ ಸಮಿತಿ ಅಸ್ತಿತ್ವಕ್ಕೆ ಬಂದರೆ ಅದಕ್ಕೊಂದು ಸ್ಪಷ್ಟ ನೀತಿ ನಿಯಮ ಸಂಸತ್ ನಲ್ಲಿ ಕಾನೂನಾಗಿ ಮಾರ್ಪಟ್ಟರೆ ಕೊಂಚ ಮಟ್ಟಿಗೆ ಭ್ರಷ್ಟಾಚಾರವನ್ನು ತಹಬಂದಿಗೆ ತರಬಹುದೇನೋ ಎನ್ನುವ ನಿರೀಕ್ಷೆಯಿದೆ. ಎಲ್ಲವೂ ಅಂದುಕೊಂಡಂತೆ ಆದರೂ ಶೇ.2ರಷ್ಟು ಭ್ರಷ್ಟಾಚಾರ ನಿಯಂತ್ರಣ ಆಡಳಿತ ವ್ಯವಸ್ಥೆಯಲ್ಲಿ ಕಾಣಬಹುದೇ ವಿನಹ ಬಾಕಿಯಂತೆ ಯಥಾಸ್ಥಿತಿಯೇ ಉಳಿದು ಬಿಡುವ ಅಪಾಯವಿದೆ. ಹಾಗಾಗಿ ಸ್ವಿಸ್ ಬ್ಯಾಂಕಿನಿಂದ ಹಣ ತರುವುದು, ಭ್ರಷ್ಟರನ್ನ ಹಿಡಿದು ಮಟ್ಟಹಾಕುತ್ತೇವೆ ಎಂದು ಹೇಳಲ್ಪಡವುದು ಸಧ್ಯಕ್ಕೆ ಹಾಸ್ಯಾಸ್ಪದವೇ ಆಗಿದೆ. ಸ್ವತ: ಅಣ್ಣಾ ಹಜಾರೆ ಹೇಳುವಂತೆ ಇನ್ನು ಹತ್ತು ವರ್ಷಗಳಲ್ಲಷ್ಟೇ ಇದರ ಪರಿಣಾಮವನ್ನು ನಿರಿಕ್ಷಿಸಬಹುದು.

ಅಣ್ಣಾ ಹಜಾರೆ ಜನಲೋಕಪಾಲ್ ಮಸೂದೆಯಲ್ಲಿ ಸಂಸತ್ ಮೀರಿದ ಮತ್ತು ಪ್ರಧಾನ ಮಂತ್ರಿ,ನ್ಯಾಯಾಧೀಶರನ್ನು ಹದ್ದುಬಸ್ತಿನಲ್ಲಿಡುವ ಸೂಪರ್ ಪವರ್ ಲೋಕಪಾಲಕ್ಕೆ ಬೇಕೆಂದು ಪಟ್ಟು ಹಿಡಿದದ್ದು ನಿಜ. ಇದು ತುಂಬಾ ಸೂಕ್ಷ್ಮ ವಿಚಾರವೂ ಹೌದು ಭಾರತದ ದೇಶ ಸಂವಿಧಾನಕ್ಕೆ ಜಾಗತಿಕವಾಗಿ ಅತ್ಯಂತ ಮಹತ್ವದ ಸ್ಥಾನವಿದೆ. ಸಂವಿಧಾನದ ಆಶಯದಂತೆ ರಚನೆಯಾಗುವ ನ್ಯಾಯಾಂಗ/ಕಾರ್ಯಾಂಗ/ಶಾಸಕಾಂಗ ಗಳ ಪೈಕಿ ಶಾಸಕಾಂಗ ಮತ್ತು ಕಾರ್ಯಾಂಗ ನೈತಿಕತೆ ಕಳೆದುಕೊಂಡಿವೆ ಜನಸಾಮಾನ್ಯರ ವಿಶ್ವಾಸ ಗಳಿಸುವಲ್ಲಿ ವಿಫಲವಾಗಿವೆ ಆದರೆ ನ್ಯಾಯಾಂಗ ಇನ್ನೂ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ. ಹೀಗಿರುವಾಗ ಲೋಕಪಾಲ ವ್ಯವಸ್ಥೆ ನ್ಯಾಯಾಂಗವನ್ನು ಆಳುವಂತಾಗಬಾರದಲ್ಲವೇ? ಅದೇ ರೀತಿ ಸಂವಿಧಾನದ ಆಶಯದಂತೆ ಸಂಸತ್ ನ ಮುಖ್ಯಸ್ಥನಾಗುವ ಪ್ರಧಾನಿ ಹೆಚ್ಚ ಶಕ್ತಿಶಾಲಿ. ಆ ಸ್ಥಾನಕ್ಕೆ ತನ್ನದೇ ಆದಂತಹ ಘನತೆ ಗೌರವಗಳಿವೆ ಮತ್ತು ರಿಯಾಯ್ತಿಗಳಿವೆ. ಹಾಗಾಗಿ ಪ್ರಧಾನಿಯನ್ನು ಸಹಾ ಲೋಕಪಾಲ ನಿಯಂತ್ರಿಸುವ ವ್ಯವಸ್ಥೆ ಸಂವಿಧಾನ ವಿರೋಧಿಯಾಗಿದೆಯಲ್ಲವೇ?

ಈಗಾಗಲೇ ದೇಶದಲ್ಲಿ ನಡೆದಿರುವ 2ಜಿ ಸ್ಪೆಕ್ಟ್ರಂ ಹಗರಣ, ಕಾಮನ್ ವೆಲ್ತ್ ಗೇಮ್ ಹಗರಣದ ಕೇಂದ್ರ ಬಿಂದುವಾಗಿ ಪ್ರಧಾನ ಮಂತ್ರಿಯವರನ್ನ ನೋಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಸಿಎಜಿ ನೇರ ವರದಿಯನ್ನು ನೀಡಿವೆ ಅಂದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾನೂನು ಅವರಿಗೂ ಅನ್ವಯವಾಗಬೇಕಲ್ಲವೇ ಎಂಬ ಪ್ರಶ್ನೆ ಎದುರಾಗಬಹುದು ಆದರೆ ಪ್ರಧಾನಿಗೆ ಅತಿ ದೊಡ್ಡ ಹೊಣೆಗಾರಿಕೆಯಿದೆ ತನ್ನ ಕರ್ತವ್ಯವನ್ನು ನೋಡಿಕೊಳ್ಳಲು ಅನೇಕ ಮಂದಿ ಮಂತ್ರಿ ಮಾಗಧರು ಇರುತ್ತಾರೆ, ಐಎಎಸ್ ಅಧಿಕಾರಿಗಳಿರುತ್ತಾರೆ ಅವರು ಪ್ರಧಾನಿಗೆ ಆಗುಹೋಗುಗಳನ್ನು ಮನವರಿಕೆ ಮಾಡುವ, ದುರ್ವಿನಿಯೋಗವಾಗದಂತೆ ಹದ್ದಿನ ಕಣ್ಣಿಡುವ ವ್ಯವಸ್ಥೆಯನ್ನು ಮಾಡಬಹುದಲ್ಲವೇ ? ಇವುಗಳನ್ನು ನಿಯಂತ್ರಿಸಲು ಪ್ರಧಾನಿ ಅಸಮರ್ಥನಾದಾಗ ಆತ ರಾಜೀನಾಮೆ ಕೊಡಬಹುದು ಆಗ ಆತನ ಮೇಲೆ ಲೋಕಪಾಲ ಮಸೂದೆಯನ್ವಯ ಕ್ರಮ ಜರುಗಿಸಲು ಅವಕಾಶವಿದೆ. ಆದರೆ ಈ ವಿಚಾರದಲ್ಲಿ ಅಣ್ಣಾ ಕೊಂಚ ಬಿಗಿಪಟ್ಟು ಹಿಡಿದ ಮಾತ್ರಕ್ಕೆ ಹಿರಿಯ ಜೀವವನ್ನು ವಿನಾ ಕಾರಣ ಜರಿದು ಅಪಮಾನಿಸುವುದು ಸರಿಯೇ? ಸದರಿ ವಿಚಾರಗಳಲ್ಲಿ ಆಡಳಿತ ಪಕ್ಷವಿರಲಿ ವಿರೋಧ ಪಕ್ಷಗಳು ಕೂಡಾ ಅಣ್ಣಾ ಮನವಿಗೆ ಸ್ಪಂದಿಸಿಲ್ಲ ಮತ್ತು ಅಣ್ಣಾ ಕೂಡ ಸದರಿ ನಿಲುವಿನಿಂದ ಹಿಂದೆ ಸರಿದಿದ್ದಾರೆ ಹೀಗಿರುವಾಗ ಅವರನ್ನ ದೂಷಣೆ ಮಾಡುವುದು ಸರಿಯಲ್ಲ.

ಇನ್ನು ಹೋರಾಟ ವೀರರ ಕಥೆ. ನೈತಿಕತೆಯ ಚಳುವಳಿಯ ಬೆಂಬಲಕ್ಕೆ ಬಂದ ಅನೇಕ ರಾಜಕೀಯ ಪಕ್ಷಗಳು, ಸಂಘಟನೆಗಳು, ವಿದ್ಯಾರ್ಥಿಗಳು ಮತ್ತು ಶ್ರೀ ಸಾಮಾನ್ಯರಲ್ಲಿ ಬಹುತೇಕರಿಗೆ ಚಳುವಳಿಯ ಆಶಯಗಳೇ ತಿಳಿಯದೇ ಹೋದುದು ದುರಂತದ ಸಂಗತಿ. ವಿದ್ಯಾರ್ಥಿಗಳ ಚಳುವಳಿಯಲ್ಲಿ ಗಾಂಭೀರ್ಯತೆ ಕಾಣಲಿಲ್ಲ ಜೋಶ್ ಎಂಬಂತೆ ಪ್ರತಿಬಿಂಬಿತವಾಯಿತು.ಕೆಲವು ಸಂಘಟನೆಗಳು ಪ್ರಚಾರದ ಸಲುವಾಗಿ ಬಂದು ಹೋದವು, ಬುದ್ದಿಜೀವಿಗಳೆನಿಸಿಕೊಂಡವರು ಕೆಲವರು ತಮ್ಮದೇ ಧಾಟಿಯಲ್ಲಿ ಬುದ್ದಿಹೀನರಂತೆ ಹೇಳಿಕೆ ನೀಡಿದರು.ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರ ಬೀಳಿಸಲು ಪ್ರತಿಭಟನೆಗೆ ಬಂದರು. ಎಲ್ಲಕ್ಕಿಂತ ಮುಖ್ಯವಾಗಿ ವ್ಯವಸ್ಥೆಯ ಭ್ರಷ್ಟರು ಸಾಮೂಹಿಕ ನೆಲೆಗಟ್ಟಿನಲ್ಲಿ ಅಣ್ಣಾ ಗೆ ಜೈ ಎಂದದ್ದು ವಿಷಾಧವಲ್ಲದೇ ಮತ್ತೇನು.? ಜೆಪಿ ಚಳುವಳಿ ನಡೆದಾಗ ಅದರಲ್ಲಿದ್ದ ಬುದ್ದಿ ಜೀವಿಗಳು ಮತ್ತು ಮುತ್ಸದ್ದಿಗಳಂತಹವರು ಅಣ್ಣಾ ಹೋರಾಟದಲ್ಲಿ ಕಾರಬರಲಿಲ್ಲ ಆದರು ದೇಶದಲ್ಲಿ ರಕ್ತ ರಹಿತ ಕ್ರಾಂತಿಗೆ ಮತ್ತು ಗಾಂಧಿವಾದಕ್ಕೆ ಅಂತಿಮ ಜಯ ದೊರೆಯಿತಲ್ಲ ಎಂಬುದಷ್ಟೇ ಸಮಾಧಾನಕರ ಸಂಗತಿಯಲ್ಲವೇ?

Sunday, August 21, 2011

ಅಣ್ಣಾ ಹಜಾರೆ ಅಂದ್ರೆ ಯಾರು ಗೊತ್ತೇನ್ರೀ??

ಅದು 1962 ವರ್ಷ.ಭಾರತ ಮತ್ತು ಚೈನಾ ದೇಶದ ನಡುವಣ ಯುದ್ದದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಾರತೀಯ ಸೈನಿಕರು ಹತರಾಗಿದ್ದರು. ಆಗ ಭಾರತ ಸರ್ಕಾರ ದೇಶಪ್ರೇಮ ಹೊಂದಿದ ಉತ್ಸಾಹಿ ಯುವಜನರನ್ನು ಭಾರತೀಯ ಸೇನೆಗೆ ಸೇರುವಂತೆ ಕರೆ ನೀಡಿತ್ತು. ಸರ್ಕಾರದ ಕರೆಗೆ ಒಗೊಟ್ಟ ರಾಲೇಗಾಂವ್ ಸಿದ್ದಿ ಗ್ರಾಮದ ಉತ್ಸಾಹಿ ಯುವ ತರುಣನೊಬ್ಬ 1963ರಲ್ಲಿ ಸೇನೆಗೆ ಸೇರಿದ. ಸಿಪಾಯಿಯಾಗುವ ಕನಸು ಹೊತ್ತಿದ್ದ ಆ ತರುಣ ತನ್ನ ಕಡಿಮೆ ಎತ್ತರದ ಕಾರಣದಿಂದಾಗಿ ಸೇನೆಯ ಟ್ರಕ್ ನಡೆಸುವ ಚಾಲಕನಾದ, ಆ ಮೂಲಕ ಭಾರತೀಯ ಸೇನೆಯ ಯೋಧನಾಗಿ ರೂಪುಗೊಂಡವನು ಸತತವಾಗಿ 15ವರ್ಷಗಳ ಸೇವೆಯಲ್ಲಿ ಸಿಕ್ಕಿಂ, ಭೂತಾನ್, ಜಮ್ಮು-ಕಾಶ್ಮೀರ, ಅಸ್ಸಾಂ ಮತ್ತು ಮಿಜೋರಾಂ, ಲೇಹ್-ಲಡಾಕ್ ಗಳಲ್ಲಿ ಅವಿಸ್ಮರಣೀಯ ಸೇವೆ ಸಲ್ಲಿಸಿದ. ಅದೊಂದು ದಿನ ತನ್ನ ಸೇವಾವಧಿಯಲ್ಲೇ ವ್ಯವಸ್ಥೆಯ ಹುಳುಕುಗಳ ಬಗ್ಗೆ ಜಿಗುಪ್ಸೆ-ಅಸಹನೆಯನ್ನು ಹೊಂದಿದ್ದ, ಜೀವನದ ಪ್ರತೀ ಘಟ್ಟದಲ್ಲೂ ಎದುರಾಗುತ್ತಿದ್ದ ವ್ಯತಿರಿಕ್ತ ಪರಿಣಾಮಗಳು ಆ ಯೋಧನಿಗೆ ತೀವ್ರ ರೇಜಿಗೆ ಹುಟ್ಟಿಸಿಬಿಟ್ಟಿತ್ತು. ತನ್ನೆಲ್ಲ ಪ್ರಶ್ನೆಗಳನ್ನು ಸೇರಿದಂತೆ 2ಪುಟಗಳ ದೀರ್ಘ ಪತ್ರವನ್ನು ಬರೆದು ಆತ್ಮಹತ್ಯೆಗೆ ಯೋಜಿಸಿದ ಯುವಕನಿಗೆ ಹೊಸದೆಹಲಿಯ ರೈಲ್ವೇ ಸ್ಟೇಷನ್ ಬೀದಿಯೊಂದರಲ್ಲಿ ನಡೆದು ಹೋಗುತ್ತಿದ್ದಾಗ ಬುಕ್ ಸ್ಟಾಲ್ ಒಂದರಲ್ಲಿ ನೇತುಹಾಕಿದ್ದ ಪುಸ್ತಕ ಆಕರ್ಷಿಸಿತು. ಅದು ಸ್ವಾಮಿವಿವೇಕಾನಂದರು ಜೀವನದ ಉದಾತ್ತ ದ್ಯೇಯಗಳ ಬಗೆಗೆ ಬರೆದ ಪುಸ್ತಕ. ಪುಸ್ತಕ ಕೊಂಡು ಓದಿದ ಯುವಕನಿಗೆ ಆತ್ಮಹತ್ಯೆಗೆ ಮುನ್ನ ಬರೆದ 2ಪುಟಗಳ ಪತ್ರದಲ್ಲಿ ಎತ್ತಿದ್ದ ಹಲವು ಪ್ರಶ್ನೆಗಳಿಗೆ ಪುಸ್ತಕದಲ್ಲಿ ಉತ್ತರ ಲಭಿಸಿತ್ತು. ಪುಸ್ತಕ ಓದಿದ ಆತ ತನ್ನ ನಿಲುವು ಬದಲಿಸಿಕೊಂಡ ಹೊಸ ಜೀವನಕ್ಕೆ ತನ್ನನ್ನು ತೊಡಗಿಸಿಕೊಳ್ಳಲು ಅನುವಾದ. ಜೀವನವೆಂದರೆ ಅದು ವ್ಯರ್ಥವಲ್ಲ, ಸಾರ್ಥಕತೆಯನ್ನು ಕಾಣುವ ಬದುಕು ಎಂದು ಆಗ ಅವನಿಗೆ ಅನಿಸಲಾರಂಭಿಸಿತು. ಇದು ಆತನ ಯೋಚನಾ ಲಹರಿಯನ್ನು ಬದುಕಿನ ದಿಕ್ಕನ್ನು ಸಂಪೂರ್ಣವಾಗಿ ಯು ಟರ್ನ್ ತೆಗೆದುಕೊಳ್ಳುವಂತೆ ಮಾಡಿಬಿಟ್ಟಿತು. ಜನರ ಸೇವೆಗೆ ತನ್ನ ಜೀವನ ಮುಡಿಪು, ಅದರಲ್ಲೆ ನನ್ನ ಬದುಕಿನ ಸೇವೆ ಅಡಗಿದೆ ಎಂದು ಆತನಿಗೆ ಅನಿಸಿದ್ದೇ ತಡ ತನ್ನ ನಿರ್ಧಾರಕ್ಕೆ ಗಟ್ಟಿತನ ದೊರಕಿಸಿಕೊಂಡು ಬಿಟ್ಟ ಯೋಧ, ನವ ತರುಣನೇ ಅಣ್ಣಾ ಸಾಹೇಬ್ ಹಜಾರೆ!


ಇವತ್ತು ದೇಶದ ಉದ್ದಗಲಕ್ಕೂ ಭ್ರಷ್ಟಾಚಾರ ವಿರೋಧಿ ಆಂಧೋಲನದ ಕ್ರಾಂತಿಯ ಕಿಡಿಯನ್ನು ಹೊತ್ತಿಸಿರುವ 74ರ ವಯೋವೃದ್ದ ಅಣ್ಣಾ ಹಜಾರೆ ತನ್ನ ಜೀವನದಲ್ಲಿ ಸಾಗಿ ಬಂದ ಹಾದಿ ತೋರುತ್ತಿರುವ ಬದ್ದತೆ ಇದೆಯಲ್ಲ ಅದು ಪ್ರಶ್ನಾತೀತವಾದುದು ಮತ್ತು ಯುವ ಜನತೆಗೆ ಆದರ್ಶಯುತವಾದುದು. ತನ್ನ 26ನೇ ವಯಸ್ಸಿನಲ್ಲೇ ಸಾರ್ವಜನಿಕ ಸೇವೆಗೆ ತನ್ನ ನಿರ್ಧಾರ ತೆಗೆದುಕೊಂಡು ಬ್ರಹ್ಮಚಾರಿಯಾಗಿಯೇ ಉಳಿಯುವ ಅಚಲ ನಿರ್ಧಾರ ಕೈಗೊಂಡ ಅಣ್ಣಾ 15ವರ್ಷಗಳ ಸೇನಾ ಸೇವೆಯ ನಂತರ ಸ್ವಯಂ ನಿವೃತ್ತಿ ಪಡೆದು ಅಹಮ್ಮದ್ ನಗರ ಜಿಲ್ಲೆಯ ರಾಲೇ ಗಾಂವ್ ಸಿದ್ದಿ ಎಂಬ ಬರಪೀಡಿತ ಹಳ್ಳಿಗೆ ಬಂದು ನೆಲೆನಿಂತ. ಆ ಹಳ್ಳಿಯಲ್ಲಿ ವಾರ್ಷಿಕವಾಗಿ 400-500ಮಿಮಿ ಮಳೆಯಾಗುತ್ತಿದ್ದರೂ ಕೃಷಿ ಚಟುವಟಿಕೆ ಮಾಡಲು ಸಾಧ್ಯವಾಗುತ್ತಿರಲಿಲ್ಲ, ಹಲವು ಕಿಮಿಗಳ ದೂರದಿಂದ ಕುಡಿಯುವ ನೀರನ್ನು ತರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿತ್ತು, ಆಹಾರ ಧಾನ್ಯಗಳಿಗೆ ಅಕ್ಕಪಕ್ಕದ ಗ್ರಾಮದವರನ್ನ ಅವಲಂಬಿಸಬೇಕಾಗಿತ್ತು. ಅರಾಜಕತೆಯ ತಾಣವಾಗಿದ್ದ ಗ್ರಾಮದಲ್ಲಿ ಸಲೀಸಾಗಿ ಸಿಗುತ್ತಿದ್ದುದು ಸಾರಾಯಿ ಮಾತ್ರ! ಇದೆಲ್ಲವನ್ನೂ ಮನಗಂಡ ಅಣ್ಣಾ ಗ್ರಾಮದ ಜನರನ್ನೆಲ್ಲ ಒಗ್ಗೂಡಿಸಿದರು. ದೊರೆಯುತ್ತಿದ್ದ ಅಲ್ಪ ನೀರನ್ನೇ ಸಂರಕ್ಷಣೆ ಮಾಡುವುದು ಹೇಗೆ,ಆಹಾರ ಧಾನ್ಯ ಸ್ವಾವಲಂಬನೆ ಸಾಧಿಸುವುದು ಹೇಗೆ?ಸಾಮಾಜಿ ಅನಿಷ್ಠಗಳನ್ನು ತಡೆಯಲು ಏನು ಮಾಡಬೇಕು ಎಂದೆಲ್ಲಾ ಚಿಂತಿಸಿದರು ಅದಕ್ಕೆ ಪೂರಕವಾದ ಮಾರ್ಗೋಪಾಯಗಳನ್ನು ರೂಪಿಸುವ ಮೂಲಕ ಅಭಿವೃದ್ದಿಯ ಮುನ್ನುಡಿಯನ್ನು ಬರೆದರು. 50ಕ್ಕೂ ಹೆಚ್ಚು ನಾಲಾ ಬಂಡಿಂಗ್ ನಿರ್ಮಾಣವಾಯಿತು. ನೀರು ಸಂಗ್ರಹಕ್ಕೆ ಬ್ಯಾರೇಜ್ ನಿರ್ಮಾಣ ಮಾಡಲಾಯಿತು. ಅನಾಮತ್ತಾಗಿ 500ಎಕರೆ ಪ್ರದೇಶದಲ್ಲಿ ಗಿಡ ನೆಟ್ಟು ಅರಣ್ಯವನ್ನು ಬೆಳೆಸಲಾಯಿತು. ಗ್ರಾಮ ಪಂಚಾಯ್ತಿಗೆ ಪುನಶ್ಚೇತನ ನೀಡಿದ ಅಣ್ಣಾ ಅದನ್ನು ಶಕ್ತಿಯುತ ಕೇಂದ್ರವಾಗಿ ರೂಪುಗೊಳಿಸಿದರು. ಗ್ರಾಮಕ್ಕೆ ಬೇಕಾದ ಸ್ಕೂಲು, ಆಸ್ಪತ್ರೆ, ಹಾಸ್ಟೆಲುಗಳನ್ನು ಸಹಾ ಕಟ್ಟಿದ ಅಣ್ಣಾ ಇದಕ್ಕಾಗಿ ಬಳಸಿದ್ದು ಒನ್ಸ್ ಎಗೇನ್ ಅದೇ ಗ್ರಾಮದ ಜನರನ್ನು! ಅಂದರೆ ಜನಶಕ್ತಿಯನ್ನೆ ಬಂಡವಾಳ ಮಾಡಿಕೊಂಡ ಅಣ್ಣಾ ತಾನಂದುಕೊಂಡಿದ್ದನ್ನೆಲ್ಲ ಸಾಕಾರ ಮಾಡಿಕೊಂಡರು. ಇದೀಗ ಅಣ್ಣಾ ಹಜಾರೆಯ ಗ್ರಾಮದ ದೇಶದ ಆದರ್ಶ ಗ್ರಾಮವಾಗಿ ಮಾರ್ಪಟ್ಟದೆ ದೇಶ ವಿದೇಶಗಳಿಂದ ಜನ ಅಲ್ಲಿಗೆ ಬರುತ್ತಿದ್ದಾರೆ. ಅಭಿವೃದ್ದಿಗೆ ಅದು ಮಾದರಿಯಾಗಿ ನಿಂತಿದೆ.

1991ರಲ್ಲಿ ಅಣ್ಣಾ ಭ್ರಷ್ಟಾಚಾರ ವಿರೋಧಿ ಆಂಧೋಲನವನ್ನು ಸಂಘಟಿಸಿದರು. ಆಗ ಮಹಾರಾಷ್ಟ್ರದಲ್ಲಿ 42ಜನ ಅರಣ್ಯಾದಿಕಾರಿಗಳು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಹಲವು ಕೋಟಿ ರೂಪಾಯಿಗಳನ್ನು ವಂಚಿಸಿದ್ದರು. ಈ ವಂಚನೆಯ ವಿರುದ್ದ ದಾಖಲೆಗಳೊಂದಿಗೆ ಹೋರಾಡಿದ ಅಣ್ಣಾ ನಿಗೆ ಸೋಲು ಕಾದಿತ್ತು. ಯಾಕೆಂದರೆ ಸದರಿ ಹಗರಣದಲ್ಲಿ ಪ್ರಭಾವ ಶಾಲಿ ಮಂತ್ರಿಯೋರ್ವನ ಕೈವಾಡವೂ ಇತ್ತು.ಬೇಸತ್ತ ಅಣ್ಣಾ ಆಗ ತಮಗೆ ಕೊಡಮಾಡಿದ್ದ ಪದ್ಮಶ್ರೀ ಪುರಸ್ಕಾರ ಹಾಗೂ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ನೀಡಿದ್ದ ವೃಕ್ಷಮಿತ್ರ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಿದರು, ಧೃತಿಗೆಡದ ಅಣ್ಣಾ ಅಪರಾಧಿಗಳಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿ ಉಪವಾಸ ಕುಳಿತರು ಕಡೆಗೆ ಮಣಿದ ಸರ್ಕಾರ ಸದರಿ ಹಗರಣಕ್ಕೆ ಸಂಬಂದಿಸಿದಂತೆ 6ಮಂದಿ ಮಂತ್ರಿಗಳನ್ನು 400ಮಂದಿ ಸರ್ಕಾರಿ ನೌಕರರನ್ನು ಕೆಲಸದಿಂದ ವಜಾಮಾಡಿತು. ಈ ಪ್ರಕರಣದಲ್ಲಿ ಅಗತ್ಯ ಮಾಹಿತಿಗಳ ಅವಶ್ಯಕತೆಯನ್ನು ಮನಗಂಡ ಅಣ್ಣಾ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರುವಂತೆ 1997ರಲ್ಲಿ ಚಳುವಳಿ ಆರಂಭಿಸಿದರು. ತೀವ್ರ ಒತ್ತಡದ ಪರಿಣಾಮ 2003ರಲ್ಲಿ ರಾಷ್ಟ್ರಪತಿಯವರು ಮಾಹಿತಿ ಹಕ್ಕು ಕಾಯ್ದೆಯನ್ನು ದೇಶಾಧ್ಯಂತ ಜಾರಿಗೆ ತರಲು ಅಂಕಿತ ಹಾಕಬೇಕಾಯ್ತು. ಇಂತಹ ಅಣ್ಣಾ ಹಜಾರೆ ಇವತ್ತು ಪ್ರಬಲ ಲೋಕಪಾಲ ಮಸೂದೆಗೆ ಪಟ್ಟು ಹಿಡಿದು ಕುಳಿತಿದ್ದಾರೆ ಇಡೀ ದೇಶದ ಜನತೆ ಇವತ್ತು ಅಣ್ಣಾ ಹಿಂದೆ ಹೊರಟಿದೆ, ಜಾಗತಿಕವಾಗಿ ಯಾವ ದೇಶದಲ್ಲೂ ಈ ಮಟ್ಟಿಗಿನ ಭ್ರಷ್ಟಾಚಾರದ ವಿರುದ್ದದ ಹೋರಾಟ ನಡೆದಿರಲಾರದು. 2ನೇ ಸ್ವಾತಂತ್ರ್ಯ ಸಂಗ್ರಾಮವನ್ನು ನೆನಪಿಸುವಂತೆ ಆಂಧೋಲನ ನಡೆಯುತ್ತಿದೆ. ಇಂತಹ ಸಂಧರ್ಭದಲ್ಲಿ ಅಣ್ಣಾ ಹಜಾರೆಯ ಬೆಂಬಲಕ್ಕೆ ನಾವೂ ಕೈ ಜೋಡಿಸಬೇಕಲ್ಲವೇ???? (ಸಶೇಷ)

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...